ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಿರುವ ಸರ್ಕಾರದ ಕ್ರಮ ಖಂಡಿಸಿ ಪ್ಲಾಸ್ಟಿಕ್ ಉತ್ಪನ್ನಗಳ ವ್ಯಾಪಾರಸ್ಥರು ಸೋಮವಾರ ನಗರದ ಅವೆನ್ಯೂ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ಲಾಸ್ಟಿಕ್ ಸಂಘದ ನೇತೃತ್ವದಲ್ಲಿ ಸೇರಿದ್ದ ನೂರಾರು ವ್ಯಾಪಾರಸ್ಥರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕರ್ನಾಟಕ ಪ್ಲಾಸ್ಟಿಕ್ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಸಾಗರ್ ಮಾತನಾಡಿ, ‘ಸರ್ಕಾರದ ನಿರ್ಧಾರದಿಂದ ವಿವಿಧ ಬಗೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸುತ್ತಿದ್ದ ರಾಜ್ಯದ 650 ಕಾರ್ಖಾನೆಗಳು ಬಂದ್ ಆಗಿವೆ. ಸುಮಾರು 75 ಸಾವಿರ ಜನ ನಿರುದ್ಯೋಗಿಗಳಾಗಿದ್ದಾರೆ’ ಎಂದು ದೂರಿದರು.
‘ಪ್ಲಾಸ್ಟಿಕ್ ಉತ್ಪನ್ನಗಳು ಮಾರಾಟವಾಗುತ್ತಿದ್ದರೂ ಮೈಸೂರು ದೇಶದ ಸ್ವಚ್ಛ ನಗರ ಎಂಬ ಖ್ಯಾತಿ ಪಡೆಯಿತು. ಆದರೆ ಬಿಬಿಎಂಪಿ, ನಗರದ ಕಸದ ಸಮಸ್ಯೆಗೆ ಪ್ಲಾಸ್ಟಿಕ್್ ಉತ್ಪನ್ನಗಳು ಕಾರಣ ಎನ್ನುತ್ತಿದೆ. ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧ ಆದೇಶ ಜಾರಿಯಾದರೂ ಕಸದ ಸಮಸ್ಯೆ ನಿವಾರಣೆಯಾಗುವುದಿಲ್ಲ’ ಎಂದು ಅವರು ಟೀಕಿಸಿದರು.
ಸಂಘದ ಅಧ್ಯಕ್ಷ ವಿ. ವಿಜಯಕುಮಾರ ಮಾತನಾಡಿ, ‘40 ಮೈಕ್ರಾನ್ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧಕ್ಕೆ ನಮ್ಮ ಬೆಂಬಲವಿದೆ. ಆದರೆ ಪ್ಲಾಸ್ಟಿಕ್ನ ಎಲ್ಲ ಉತ್ಪನ್ನಗಳನ್ನು ನಿಷೇಧಿಸುವುದು ಸರಿಯಲ್ಲ. ಸರ್ಕಾರದ ನಿರ್ಧಾರ ಖಂಡಿಸಿ ಅಂಗಡಿಗಳನ್ನು ಬಂದ್ ಮಾಡಿ ವ್ಯಾಪಾರಸ್ಥರೆಲ್ಲರೂ ಪ್ರತಿಭಟನೆ ಮಾಡುತ್ತಿದ್ದೇವೆ. ಸಂಘದ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು’ ಎಂದು ಹೇಳಿದರು.