ಬೆಂಗಳೂರು: ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು 70 ವರ್ಷಗಳನ್ನು ಪೂರೈಸಿದ ಪ್ರಯುಕ್ತ ಬರಗೂರು ಆತ್ಮೀಯರ ಬಳಗ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟದ ಆಶ್ರಯದಲ್ಲಿ ‘ರಾಜ್ಯಮಟ್ಟದ ವಿಚಾರ ಸಂಕಿರಣ’ವನ್ನು ಇದೇ 25ರಂದು ಆಯೋಜಿಸಲಾಗಿದೆ.
ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಳಗದ ಸಂಚಾಲಕ ಡಾ.ರಂಗಾರೆಡ್ಡಿ ಕೋಡಿರಾಂಪುರ, ‘ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಸಂಸದ ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಲಿದ್ದಾರೆ.
ಬರಗೂರರ ಕುರಿತ ‘ಬೆವರು ಬರೆದ ಬರಹ’ (ಬೈರಮಂಗಲ ರಾಮೇಗೌಡ), ಶಬರಿ (ಆಂಗ್ಲಾನುವಾದ: ಡಾ.ಬಸವರಾಜ ಡೋಣೂರ), ‘ಸಾಹಿತ್ಯ ಸಮ್ಮೇಳ ನಾಧ್ಯಕ್ಷರಾಗಿ ಬರಗೂರು’ (ಡಾ.ಕರಿಯಪ್ಪ ಮಾಳಿಗೆ) ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ಬಿಡುಗಡೆ ಮಾಡಲಿದ್ದಾರೆ’ ಎಂದರು.
‘ನಮ್ಮೊಳಗಿನ ಬರಗೂರರ ಸಾಹಿತ್ಯ ಮತ್ತು ಸಿನಿಮಾ ಪ್ರಜ್ಞೆ ಕುರಿತ ಗೋಷ್ಠಿ ಹಾಗೂ ಕವಿಗೋಷ್ಠಿ ನಡೆಯಲಿವೆ. ಸಂಜೆ 5.30ಕ್ಕೆ ನಡೆಯುವ ಸಮಾರೋಪದಲ್ಲಿ ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರಶೇಖರ ಪಾಟೀಲ ಅವರಿಗೆ ಗೌರವ ಸಮರ್ಪಿಸಲಿದ್ದೇವೆ.
ಮಧ್ಯಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಕುಲಪತಿ ಡಾ.ತೇಜಸ್ವಿ ಕಟ್ಟಿಮನಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮುರಿಗೆಪ್ಪ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.