ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋದ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ. ವಿಷಯ ತಿಳಿದ ಕೂಡಲೇ ಹತ್ತು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಮೈಸೂರು ರಸ್ತೆಯ ಟೋಲ್ಗೇಟ್ ಬಳಿ ಮಹಮ್ಮದ್ ಉಮರ್ ಶ್ರಾಫ್ ಎಂಬುವರಿಗೆ ಸೇರಿದ ಅಗರ ಬತ್ತಿ ಕಾರ್ಖಾನೆ ಇದೆ. ಮೂರು ಮಹಡಿಯ ಕಟ್ಟಡದಲ್ಲಿ ಅಗರ ಬತ್ತಿ ತಯಾರಿಸಲಾಗುತ್ತಿತ್ತು. ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಇಲ್ಲಿ ಆಕಸ್ಮಿವಾಗಿ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಮಧ್ಯಾಹ್ನ 12 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
3ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಮೂರು ಮಹಡಿಗಳಿಗೂ ವ್ಯಾಪಿಸಿತ್ತು. ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಘಟನೆಗೆ ನಿಖರ ಕಾರಣ ಏನೆಂದು ತನಿಖೆಯ ನಂತರ ಗೊತ್ತಾಗಲಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.