ಬೆಂಗಳೂರು: ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಗುರುವಾರ ಪೊರಕೆ ಮೆರವಣಿಗೆ ಮಾಡಿದರು.
ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ `ಸರ್ಕಾರ ಯಾವುದೇ ಭಯವಿಲ್ಲದೇ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಆಹಾರ ಪದಾರ್ಥಗಳು, ಔಷಧಿ, ಪೆಟ್ರೋಲ್ ವಸ್ತುಗಳ ಬೆಲೆ ಗಗನಕ್ಕೇರಿದ್ದು ಸಾಮಾನ್ಯ ಜನ ತತ್ತರಿಸುವಂತಾಗಿದೆ~ ಎಂದರು.
ಕಾರ್ಖಾನೆಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿ, ಜೀವನೋಪಾಯಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ, ರೈತರ ಸಾವಿರಾರು ಎಕರೆ ಭೂಮಿಯನ್ನು ಕೊಳ್ಳೆ ಹೊಡೆಯಲಾಗಿದೆ. ಮತ್ತೊಂದು ಕಡೆ ಈ ರೀತಿ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರನ್ನು ಬೀದಿಗೆ ತಂದಿರುವ ಸರ್ಕಾರ ಮುಂದಿನ ಶಾಸನ ಸಭೆಯಲ್ಲಿ ಮೂರು ದಿನಗಳ ಕಾಲ ಬೆಲೆ ಏರಿಕೆಯ ಬಗ್ಗೆಯೇ ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು.
ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿರುವ ಸರ್ಕಾರ ಜನಸಾಮಾನ್ಯನ ಬಗ್ಗೆಯೂ ಗಮನ ಹರಿಸಬೇಕು ಎಂದರು. ಆಹಾರ ಪದಾರ್ಥಗಳ ದರ ಪಟ್ಟಿಯನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಬೆಲೆ ಏರಿಕೆಯ ಭೂತವನ್ನು ನಿರ್ಮಿಸಿ ಅದಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.