ನೆಲಮಂಗಲ: `ಸರ್ಕಾರಿ ನೌಕರರು ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸಿ, ಭ್ರಷ್ಟಾಚಾರ ಮುಕ್ತ ವಾತಾವರಣ ನಿರ್ಮಾಣ ಮಾಡಬೇಕು~ ಎಂದು ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವಣ್ಣದೇವರ ಮಠದಲ್ಲಿ ಸರ್ಕಾರಿ ನೌಕರರ ಸಂಘವು ಏರ್ಪಡಿಸಿದ್ದ ವಿಭಾಗ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, `ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಕಾಯಕದಲ್ಲಿ ಕೈಲಾಸ ಕಾಣುವಂತಾಗಬೇಕು~ ಎಂದು ಸಲಹೆ ನೀಡಿದರು.
ಸಂಘದ ಅಧ್ಯಕ್ಷ ಎಲ್.ಬೈರಪ್ಪ ಮಾತನಾಡಿ, `ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ನೌಕರರಿಗೆ ಕಾನೂನು ರಕ್ಷಣೆ ಒದಗಿಸಬೇಕು ಮತ್ತು ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ
ಮಾಡಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕು~ ಎಂದು ಒತ್ತಾಯಿಸಿದರು.
ಸಂಘದ ಖಜಾಂಚಿ ಡಾ.ಚೌಡಯ್ಯ, `ಸರ್ಕಾರಿ ನೌಕರರ ಸಮರ್ಪಕ ಸೇವೆಯಿಂದ ರಾಜ್ಯ ಸರ್ಕಾರ ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದೆ. ನೌಕರರು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು~ ಎಂದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಹೊಂಬಯ್ಯ, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ತಹಶೀಲ್ದಾರ್ ಅನಿಲ್ಕುಮಾರ್, ಕೆ.ಜಿ.ಭೀಮರಾಜು, ರೇವಣಸಿದ್ದಯ್ಯ ಪಾಲ್ಗೊಂಡಿದ್ದರು.
ಸಹಕರಿಸಲು ಮನವಿ: ಪಟ್ಟಣದ 80 ಅಡಿ ರಸ್ತೆಯ ಅಗಲೀಕರಣ ಕಾಮಗಾರಿಗಾಗಿ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಕುಡಿಯುವ ನೀರು ಸರಬರಾಜಿನ ಪೈಪ್ಗಳು ಹೊಡೆದು ಹೋಗಿವೆ. ಇದರಿಂದ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಎ.ಪಿಳ್ಳಪ್ಪ, ಮನವಿ ಮಾಡಿದ್ದಾರೆ.