ಮೈಸೂರು: ನಟ ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲೇ ನಿರ್ಮಾಣವಾಗಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ನಟಿ ಭಾರತಿ ವಿಷ್ಣುವರ್ಧನ್ ಬುಧವಾರ ತಿಳಿಸಿದರು.
ತಾಲ್ಲೂಕಿನ ದುದ್ದಗೆರೆಯಲ್ಲಿ ನಡೆಯುತ್ತಿದ್ದ ‘ರಾಜಾಸಿಂಹ’ ಚಲನಚಿತ್ರೀಕರಣದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಮಾರಕ ನಿರ್ಮಾಣ ಕುರಿತು ನಟ ಬಾಲಕೃಷ್ಣ ಅವರ ಪುತ್ರ ಹಗುರವಾಗಿ ಮಾತನಾಡಿರುವುದು ಮನಸ್ಸಿಗೆ ನೋವು ತಂದಿದೆ. ಹೀಗಾಗಿ, ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ ಬೇಡವೇ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದರು.
ಸ್ಮಾರಕ ನಿರ್ಮಾಣಕ್ಕಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೊ ಜಾಗವನ್ನು ಸರ್ಕಾರ ತನ್ನ ವಶಕ್ಕೆ ತೆಗೆದುಕೊಂಡು ಬೇಲಿಯನ್ನೂ ನಿರ್ಮಿಸಿತ್ತು. ಆದರೆ, ಬೇಲಿಯನ್ನು ತೆರವುಗೊಳಿಸಲಾಗಿದೆ. ಇಷ್ಟೆಲ್ಲಾ ಆದ ಮೇಲೆ ಅಲ್ಲಿ ಸ್ಮಾರಕ ಬೇಡ. ವಿಷ್ಣುವರ್ಧನ್ ಅವರು ಬಹುವಾಗಿ ಪ್ರೀತಿಸುತ್ತಿದ್ದ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸುವುದು ಸೂಕ್ತ. ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.