ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜನತೆಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಶುಕ್ರವಾರ ದೂರು ಸಲ್ಲಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಭೇಟಿ ಮಾಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ.
ಸಂಘಪರಿವಾರದ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ರಾಜಕೀಯ ಪ್ರೇರಿತ ಕೊಲೆ ಪ್ರಕರಣಗಳು ರಾಜ್ಯದಾದ್ಯಂತ ನಡೆದಿವೆ. ಕೊಡಗು, ಉಡುಪಿ, ಬೆಂಗಳೂರಿನಲ್ಲಿ ಪರಿವಾರದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳನ್ನು ಬಂಧಿಸಬೇಕಾದ ಸರ್ಕಾರ ಕೊಲೆಗಡುಕರಿಗೆ ರಕ್ಷಣೆ ನೀಡುತ್ತಿದೆ ಎಂದು ದೂರಿನಲ್ಲಿ ವಿವರಿಸಿದೆ.
ಶಿವಾಜಿ ನಗರದಲ್ಲಿ ಆರ್್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ಹಾಡಹಗಲೇ ಹತ್ಯೆ ಮಾಡಲಾಗಿದೆ. ಘಟನೆ ನಡೆದು ವಾರ ಕಳೆಯುತ್ತಾ ಬಂದರೂ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ಯಶಸ್ವಿಯಾಗಿಲ್ಲ ಎಂದು ಬಿಜೆಪಿಯ ನಿಯೋಗ ಆಪಾದಿಸಿದೆ.
* ರುದ್ರೇಶ್ ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸುವ ಯೋಗ್ಯತೆ ರಾಜ್ಯ ಸರ್ಕಾರಕ್ಕೆ ಇಲ್ಲದಿದ್ದರೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ