ಬೆಂಗಳೂರು: ರೈಲಿನಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು, ಅವರ ಬಳಿಯ ವಸ್ತುಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೈಸೂರಿನಿಂದ ನಗರಕ್ಕೆ ಬರುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರೂ, ಪ್ರಯಾಣಿಕರೊಬ್ಬರ ಪರ್ಸ್ ಕದ್ದು ಸಿಕ್ಕಿಬಿದ್ದಿದ್ದರು. ಅವರನ್ನು ಹಿಗ್ಗಾಮುಗ್ಗ ಥಳಿಸಿದ ಸಹ ಪ್ರಯಾಣಿಕರು, ಕೆಂಗೇರಿ ನಿಲ್ದಾಣದಲ್ಲಿ ರೈಲ್ವೆ ಪೊಲೀಸರ ವಶಕ್ಕೆ ನೀಡಿದ್ದಾರೆ.
‘ರೈಲಿನಲ್ಲಿ ಹಲವರು ಪರ್ಸ್ ಹಾಗೂ ಚಿನ್ನದ ಸರಗಳನ್ನು ಕಳೆದುಕೊಂಡಿದ್ದರು. ಈ ಆರೋಪಿಗಳೇ ನಿತ್ಯವೂ ರೈಲಿನಲ್ಲಿ ಸಂಚರಿಸಿ ಕಳ್ಳತನ ಮಾಡುತ್ತಿದ್ದರು ಎಂಬ ಅನುಮಾನವಿದೆ. ಪೊಲೀಸರು ಅವರನ್ನು ವಿಚಾರಣೆ ನಡೆಸಿದರೆ ನಿಜಾಂಶ ತಿಳಿಯಲಿದೆ’ ಎಂದು ಪ್ರಯಾಣಿಕರೊಬ್ಬರು ತಿಳಿಸಿದರು.
ಪೊಲೀಸರು, ‘ಥಳಿತದಿಂದ ಗಾಯಗೊಂಡಿರುವ ಇಬ್ಬರಿಗೂ ಚಿಕಿತ್ಸೆ ಕೊಡಿಸಿದ್ದೇವೆ. ಅವರು ತಮ್ಮ ಹೆಸರು ಹಾಗೂ ವಿಳಾಸ ಹೇಳುತ್ತಿಲ್ಲ. ಭಾಷೆ ಗೊತ್ತಿಲ್ಲದವರಂತೆ ನಟಿಸುತ್ತಿದ್ದಾರೆ. ಹೀಗಾಗಿ, ಸದ್ಯಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ’ ಎಂದರು.