ಬೆಂಗಳೂರು: ನಗರದ ಜ್ಞಾನಭಾರತಿ ಆವರಣದಲ್ಲಿ ನೇಪಾಳ ಮೂಲದ ಯುವತಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಮೂಲತಃ ರಾಮನಗರ ಮತ್ತು ಮಂಡ್ಯ ಜಿಲ್ಲೆಯವರು ಎಂದು ತಿಳಿದು ಬಂದಿದೆ.
ಶನಿವಾರ ರಾತ್ರಿ (ಅ.13) ಜ್ಞಾನಭಾರತಿ ಆವರಣದಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನು, ಏಳೆಂಟು ಮಂದಿ ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಘಟನೆ ಸಂಬಂಧ ಆ ಯುವತಿ ಜ್ಞಾನಭಾರತಿ ಠಾಣೆಯಲ್ಲಿ ದೂರು ನೀಡಿದ್ದಳು. ಪ್ರಕರಣದ ತನಿಖೆಗೆ ಆರು ಇನ್ಸ್ಪೆಕ್ಟರ್ಗಳನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ತನಿಖಾ ತಂಡ ಶುಕ್ರವಾರ ಆರೋಪಿಗಳನ್ನು ಬಂಧಿಸಿದೆ. ಈಗಾಗಲೇ ಉಳಿದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರ ಅವರನ್ನು ಬಂಧಿಸಲಾಗುವುದು~ ಎಂದು ಹೆಸರು ಹೇಳಲು ಇಚ್ಛಿಸದ ಪೊಲೀಸ್ ಸಿಬ್ಬಂದಿ `ಪ್ರಜಾವಾಣಿ~ಗೆ ತಿಳಿಸಿದರು.
ಗಂಧದ ಮರ ಸಾಗಿಸುತ್ತಿದ್ದ ಆರೋಪದ ಮೇಲೆ ಬಂಧಿತರ ವಿರುದ್ಧ ಈಗಾಗಲೇ ಬೆಂಗಳೂರು, ರಾಮನಗರ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ವಿಧಿವಿಜ್ಞಾನ ಪ್ರಯೋಗಾಲಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.