ಬೆಂಗಳೂರು:ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದ ಲಿಂಗದಹಳ್ಳಿ ಚೇತನ್ಕುಮಾರ್, ಅರ್ಜಿ ಹಿಂಪಡೆಯಲು ಮುಂದಾಗಿರುವ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿ ದೂರುದಾರರಾಗಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಚೇತನ್ಕುಮಾರ್, ಸೋಮಣ್ಣ ಅವರು ರೂ 12 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸುವಂತೆಯೂ ಕೋರಿದ್ದರು. ಈ ಕುರಿತು ನ್ಯಾಯಾಲಯದಿಂದ ಇನ್ನೂ ಆದೇಶ ಪ್ರಕಟವಾಗಿರಲಿಲ್ಲ.
ಇತ್ತೀಚೆಗೆ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಿದ ಚೇತನ್ ಕುಮಾರ್, ಸೋಮಣ್ಣ ವಿರುದ್ಧ ಸಲ್ಲಿಸಿರುವ ಖಾಸಗಿ ದೂರನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡುವಂತೆ ಕೋರಿದ್ದರು. ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಪ್ರತ್ಯೇಕ ಖಾಸಗಿ ದೂರು ಸಲ್ಲಿಸಿದ ರಾಮಕೃಷ್ಣ ಎಂಬುವರು, ಸೋಮಣ್ಣ ವಿರುದ್ಧದ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದರು.