ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿ ಹಾಗೂ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿ ಜೈಲಿನ ಹೊರಗಡೆ ತೆಗೆಸಿಕೊಂಡಿದ್ದಾರೆ ಎನ್ನಲಾದ ಫೋಟೊ ಬಗ್ಗೆ ವಿಚಾರಣೆ ನಡೆಸಿದ ಅಧೀಕ್ಷಕರು, ಕಾರಾಗೃಹ ಇಲಾಖೆಯ ಉನ್ನತ ಅಧಿಕಾರಿಗೆ ಬುಧವಾರ ವರದಿ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.
ಸಾಫ್ಟ್ವೇರ್ ಉದ್ಯೋಗಿ ಪ್ರತಿಭಾ ಕೊಲೆ ಪ್ರಕರಣದ ಅಪರಾಧಿ ಕ್ಯಾಬ್ ಚಾಲಕ ಶಿವಕುಮಾರ್ ಹಾಗೂ ಕಾರಾಗೃಹದ ಭದ್ರತೆಗೆ ನಿಯೋಜನೆಗೊಂಡಿರುವ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿ ಫೋಟೊದಲ್ಲಿದ್ದರು. ಆ ಇಬ್ಬರನ್ನು ವಿಚಾರಣೆಗೆ ಒಳಪಡಿಸಿ, ಅವರ ಹೇಳಿಕೆಯನ್ನು ವರದಿಯೊಂದಿಗೆ ಲಗತ್ತಿಸಲಾಗಿದೆ.
‘ಕಾರಾಗೃಹದೊಳಗಿನ ಅಕ್ರಮ ಚಟುವಟಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಇದರಿಂದ ಕೋಪಗೊಂಡ ಕೆಲವರು, ನನ್ನ ಹೆಸರಿಗೆ ಕಳಂಕ ತರುವ ದುರುದ್ದೇಶದಿಂದ ತಿರುಚಿದ (ಮಾರ್ಪಿಂಗ್) ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಶಿವಕುಮಾರ್ ಹೇಳಿರುವುದಾಗಿ ಗೊತ್ತಾಗಿದೆ.
‘ಒಂದೂವರೆ ವರ್ಷದಿಂದ ಕಾರಾಗೃಹದಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ವಿರುದ್ಧ ಅಪಪ್ರಚಾರ ಮಾಡಲು ಕೆಲವರು ಈ ರೀತಿ ಮಾಡಿದ್ದಾರೆ. ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೊ ನಕಲಿ’ ಎಂದು ಗೃಹ ರಕ್ಷಕಿ ಹೇಳಿಕೆ ನೀಡಿದ್ದಾರೆ.