ಬೆಂಗಳೂರು: ‘ಹಕ್ಕು ಆಧಾರಿತ ಅಭಿವೃದ್ಧಿಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳುವಲ್ಲಿ ವಕೀಲರ ಪಾತ್ರ ಮಹತ್ವದ್ದು’ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ ಅಭಿಪ್ರಾಯಪಟ್ಟರು.
ಸಮಾನ ಮನಸ್ಕ ವಕೀಲರ ವೇದಿಕೆ ಮತ್ತು ಜಯ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ‘ರಾಜ್ಯದ ಅಭಿವೃದ್ಧಿಗೆ ನ್ಯಾಯವಾದಿಗಳ ಪಾತ್ರ’ ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಅವರು, ‘ಇದು ಹಕ್ಕು ಆಧಾರಿತ ಅಭಿವೃದ್ಧಿಯ ಕಾಲ. ಯಾವ ಪ್ರಜೆಯ ಹಕ್ಕಿಗೂ ಧಕ್ಕೆ ಬರದ ಹಾಗೆ ಅಭಿವೃದ್ಧಿ ಸಾಧಿಸಬೇಕು’ ಎಂದರು.
ರಾಜ್ಯ ವಕೀಲರ ಪರಿಷತ್ತಿನ ಉಪಾಧ್ಯಕ್ಷ ರವೀಂದ್ರನಾಥ ರೈ ಮಾತನಾಡಿ, ‘ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಯಾವ ವ್ಯಕ್ತಿಯೂ ಹಸಿವಿನಿಂದ ಮಲಗದ ದಿನ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದರು.
ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಬಿ.ಎನ್. ಜಗದೀಶ್, ‘ಸಾಮಾಜಿಕ ಸೇವೆಗಾಗಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದರೂ ಕೆಲವು ಮಾಧ್ಯಮಗಳು ನಮ್ಮನ್ನು ಕಡೆಗಣಿಸುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.