ಬೀದರ್: ‘ನವೀಕರಿಸಬಹುದಾದ ಮೂಲದ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 2030ರ ವೇಳೆಗೆ 450 ಗಿಗಾ ವ್ಯಾಟ್ಗೆ ಹೆಚ್ಚಿಸುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಇಲ್ಲಿಯ ಪ್ರತಾಪನಗರದ ಘಾಳೆ ಫಂಕ್ಷನ್ ಹಾಲ್ನಲ್ಲಿ ಸೋಮವಾರ ನಡೆದ ‘ಜನಾಶೀರ್ವಾದ ಯಾತ್ರೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸೌರಶಕ್ತಿ, ಪವನಶಕ್ತಿ, ಬಯೊಗ್ಯಾಸ್, ಜಲಶಕ್ತಿಯ ಮೂಲಕ 2022ರ ವರೆಗೆ 300 ಗಿಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು’ ಎಂದು ತಿಳಿಸಿದರು.
‘2015ರಲ್ಲಿ ಕೇಂದ್ರ ಸರ್ಕಾರ 2022ರ ವೇಳೆಗೆ ಭಾರತ 175 ಗಿಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿದೆ ಎಂದು ಹೇಳಿತ್ತು. ಪ್ರಸ್ತುತ ಉತ್ಪಾದನೆ ಸಾಮರ್ಥ್ಯ 100 ಗಿಗಾ ವ್ಯಾಟ್ಗೆ ತಲುಪಿದೆ. ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಭಾರತ ವಿಶ್ವದಲ್ಲೇ ನಾಲ್ಕನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ’ ಎಂದು ತಿಳಿಸಿದರು.
‘ಏಳು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಗೊಬ್ಬರದ ಕೊರತೆ ಉಂಟಾಗಿಲ್ಲ. ನಾಲ್ಕು ಫ್ಯಾಕ್ಟರಿಗಳು 12.70 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಉತ್ಪಾದನೆ ಮಾಡುತ್ತಿವೆ. ಬರುವ ವರ್ಷದಿಂದ ವಿದೇಶದಿಂದ ಗೊಬ್ಬರ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲಾಗುವುದು’ ಎಂದು ಹೇಳಿದರು.
‘ಕೇಂದ್ರದ ಬಿಜೆಪಿ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಜನರಿಗೆ ಕಡಿಮೆ ದರದಲ್ಲಿ ಔಷಧಿಗಳನ್ನು ಪೂರೈಸುತ್ತಿದೆ. ಬರುವ ದಿನಗಳಲ್ಲಿ ಜನೌಷಧಿ ಕೇಂದ್ರಗಳನ್ನೂ ಹೆಚ್ಚಿಸಲಾಗುವುದು’ ಎಂದು ತಿಳಿಸಿದರು.