ಬೀದರ್: ಜಿಲ್ಲೆಯಲ್ಲಿ ಸಕ್ರಿಯ ಕ್ಷಯ ರೋಗ ಪ್ರಕರಣಗಳ ಪತ್ತೆಗೆ 718 ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ.ದೀಪಾ ಖಂಡ್ರೆ ಹೇಳಿದರು.
ಸಕ್ರಿಯ ಕ್ಷಯ ರೋಗ ಪ್ರಕರಣಗಳ ಪತ್ತೆ ಆಂದೋಲನ ಪ್ರಯುಕ್ತ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಆಂದೋಲನದ ಭಾಗವಾಗಿ 1,436 ಆಶಾ ಕಾರ್ಯಕರ್ತೆಯರು, 535 ಆರೋಗ್ಯ ಸಿಬ್ಬಂದಿ ಹಾಗೂ 143 ಸ್ವಯಂ ಸೇವಕರು 3,85,816 ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅಭಿಯಾನದಲ್ಲಿ 19,277 ಶಂಕಿತ ರೋಗಿಗಳನ್ನು ಪತ್ತೆ ಮಾಡುವ ಅಂದಾಜು ಇದೆ ಎಂದು ಹೇಳಿದರು.
ಪ್ರತಿ ಕ್ಷಯ ರೋಗಿಗೆ ಚಿಕಿತ್ಸಾ ಅವಧಿಯಲ್ಲಿ ಪೌಷ್ಟಿಕ ಆಹಾರಕ್ಕೆ ಮಾಸಿಕ ₹500 ಹಾಗೂ ರೋಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ ₹1,000 ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅವರು ಅಭಿಯಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಇದ್ದರು.