ಬೀದರ್: ಜಿಲ್ಲೆಯಲ್ಲಿ ಯಾರೇ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಎಚ್ಚರಿಕೆ ನೀಡಿದರು.
ವಿಧಾನಸಭೆ ಚುನಾವಣೆ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣೆ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಕಟೌಟ್, ಪೋಸ್ಟರ್, ಬಂಟಿಂಗ್, ಧ್ವಜ, ಗೋಡೆ ಬರಹ, ಬ್ಯಾನರ್ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ತಿಳಿಸಿದರು.
ಅಭ್ಯರ್ಥಿ ನಾಮಪತ್ರ ಸಲ್ಲಿಸುವವರೆಗೆ ರಾಜಕೀಯ ಪಕ್ಷಕ್ಕೆ ಖರ್ಚು ಹಾಕಲಾಗುವುದು. ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿ ಖಾತೆಗೆ ಖರ್ಚು ಹಾಕಲಾಗುವುದು ಎಂದು ಹೇಳಿದರು.
ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ತಲಾ ಮೂರು ವಾಹನಗಳಿಗೆ ಅನುಮತಿ ಕೊಡಲಾಗುವುದು. ನಾಮಪತ್ರ ಸಲ್ಲಿಸಿದ ದಿನದಿಂದ ಕ್ಷೇತ್ರದಲ್ಲಿ ಸಂಚರಿಸಲು ಅಭ್ಯರ್ಥಿ ಆರ್.ಒ. ಅವರಿಂದ ಅನುಮತಿ ಪಡೆಯಬೇಕು. ಅನುಮತಿ ಇಲ್ಲದ ವಾಹನಗಳಿಗೆ ಧ್ವಜ, ಪೋಸ್ಟರ್, ಬ್ಯಾನರ್ ಅಳವಡಿಸಿದ್ದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ರಾಜಕೀಯ ಪಕ್ಷಗಳು ಸಭೆ, ಸಮಾರಂಭ, ಮೆರವಣಿಗೆಗೆ ಆರ್.ಒ. ಅವರಿಂದ ಸುವಿಧಾ ಆನ್ಲೈನ್ ಪೊರ್ಟಲ್ ಮೂಲಕ ಅನುಮತಿ ಪಡೆಯಬೇಕು. ಹೆಲಿಕಾಪ್ಟರ್ಗೆ ಅನುಮತಿ ಕಡ್ಡಾಯ ಎಂದು ಹೇಳಿದರು.
ಸೀರೆ, ಕುಕ್ಕರ್, ಗಡಿಯಾರ ಹಂಚಿದ್ದಲ್ಲಿ ಅವುಗಳ ಮೇಲೆ ಭಾವಚಿತ್ರ ಅಥವಾ ಹೆಸರಿರುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಒಬ್ಬ ವ್ಯಕ್ತಿ ರೂ. 50 ಸಾವಿರ ವರೆಗೆ ಮಾತ್ರ ಇಟ್ಟುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 1,504 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು.ಈಗಾಗಲೇ 30 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. 38 ಫ್ಲೈಯಿಂಗ್ ಸ್ಕ್ವಾಡ್ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
ಏಪ್ರಿಲ್ 13 ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ. ಮೇ 10ಕ್ಕೆ ಮತದಾನ ನಡೆಯಲಿದೆ. ಮೇ 13ಕ್ಕೆ ಮತ ಏಣಿಕೆ ಜರುಗಲಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ. ಮಾತನಾಡಿ, ಈಗಾಗಲೇ ಚಾಲ್ತಿಯಲ್ಲಿ ಇರುವ ಕಾಮಗಾರಿಗಳು, ನರೇಗಾ ಕಾಮಗಾರಿಗಳು ಮುಂದುವರಿಯಲಿವೆ. ಹೊಸ ಕಾಮಗಾರಿಗಳಿಗೆ ಅವಕಾಶ ಇರುವುದಿಲ್ಲ ಎಂದರು. ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರು, ಶೌಚಾಲಯ ಮೊದಲಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಮಾತನಾಡಿ, ರಾಜಕೀಯ ಪಕ್ಷಗಳು ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸಬೇಕು. ಇಲ್ಲವಾದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಚುನಾವಣೆ ಕರ್ತವ್ಯಕ್ಕೆ ಬೇರೆ ರಾಜ್ಯಗಳಿಂದ ಅರೆ ಸೇನಾ ಪಡೆಗಳು ಬರಲಿವೆ. ಅವರೊಂದಿಗೆ ಯಾರೂ ವಾದ, ವಿವಾದ ಮಾಡಬಾರದು. ಅವರು ಯಾರ ಮಾತನ್ನೂ ಕೇಳುವುದಿಲ್ಲ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಕಾಂಗ್ರೆಸ್ನ ಎಂ.ಎ. ಸಮಿ, ಬಿಜೆಪಿಯ ಬಸವರಾಜ ಪವಾರ್, ಜೆಡಿಎಸ್ನ ಅಶೋಕ ಕೋಡಗೆ, ಸಿಪಿಐನ ಬಾಬುರಾವ್ ಹೊನ್ನಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮುಖಂಡರು ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.