ಬೀದರ್: ನಗರದ ಮೈಲೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಸೇರಿದ ಜಾಗದ ಅತಿಕ್ರಮಣ ತೆರವುಗೊಳಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಪಾಲಿಟೆಕ್ನಿಕ್ಗೆ ಸೇರಿದ ಜಾಗದ ಸುತ್ತುಗೋಡೆ ಒಡೆದು ಕೆಲ ಖಾಸಗಿಯವರು ಜಾಗ ಅತಿಕ್ರಮಿಸಿದ್ದಾರೆ. ಮನೆ ಕೂಡ ನಿರ್ಮಿಸಿಕೊಂಡಿದ್ದಾರೆ. ಕೂಡಲೇ ಅದನ್ನು ತೆರವುಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಸರ್ಕಾರಿ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ್ ರಾಕ್ಲೆ, ಸಂಘಟನಾ ಕಾರ್ಯದರ್ಶಿ ಹೇಮಂತ್, ಓಂ ಸಾಯಿ, ಪವನ್ ಕುಂಬಾರ್, ಅಭಿಷೇಕ್ ಶಂಭು, ವಿನಾಯಕ್, ಸಾಯಿಚರಣ, ಅಂಕಿತ್, ವಿವೇಕ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.