ಬೀದರ್: ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ವಿಭಾಗೀಯ ನಿಯಂತ್ರಣಾಧಿಕಾರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.
ಮೇ 22 ರಿಂದಲೇ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಆದರೆ, ಬಸ್ ಪಾಸ್ ವಿತರಿಸದ ಕಾರಣ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗುತ್ತಿದೆ ಎಂದು ದೂರಿದರು.
ವಿದ್ಯಾರ್ಥಿಗಳಿಗೆ ವರ್ಷದ ಎಲ್ಲ 12 ತಿಂಗಳ ಬಸ್ ಪಾಸ್ ಕೊಡಬೇಕು. ಬಸ್ ಪಾಸ್ ಹೊಂದಿದವರಿಗೆ ನಗರ ಸಾರಿಗೆ ಬಸ್ಗಳಲ್ಲೂ ಸಂಚರಿಸಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದ ಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ್, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಧನಂಜಯ ಚಿತ್ರದುರ್ಗ, ನಗರ ಘಟಕದ ಉಪಾಧ್ಯಕ್ಷ ಚನ್ನಬಸವ ಬಿರಾದಾರ, ಅಶೋಕ ಶೆಂಬೆಳ್ಳಿ, ಅರವಿಂದ ಸುಂದಾಳಕರ್, ಸಚಿನ ಗುನ್ನಾಳೆ, ಉಮೇಶ ಪಾಲ್ಗೊಂಡಿದ್ದರು.