ಬೀದರ್: ‘ರೈತರು ಹೈನುಗಾರಿಕೆ, ಕೃಷಿ ಹಾಗೂ ತೋಟಗಾರಿಕೆಯಲ್ಲಿ ಹೊಸ ವಿಧಾನಗಳನ್ನು ಅನುಸರಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು. ಈ ದಿಸೆಯಲ್ಲಿ ತರಬೇತಿ ಕೇಂದ್ರದ ಸದುಪಯೋಗ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮನವಿ ಮಾಡಿದರು.
ನಗರದ ಜನವಾಡ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆವರಣದಲ್ಲಿ ನೂರು ರೈತರಿಗೆ ಏಕ ಕಾಲದಲ್ಲಿ ತರಬೇತಿ ನೀಡಲು ಅನುಕೂಲವಾಗುವಂತೆ ₹1.38 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರೈತ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಹೈನುಗಾರಿಕೆ ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿಸಿಕೊಂಡವರಿಗೆ ಬೀದರ್ನಲ್ಲಿ ಆಯೋಜಿಸಿದ್ದ ಪಶು ಮೇಳದಿಂದಾಗಿ ಸಾಕಷ್ಟು ಅನುಕೂಲವಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಈ ರೈತ ತರಬೇತಿ ಕೇಂದ್ರದಿಂದಲೂ ರೈತರಿಗೆ ವಿವಿಧ ರೀತಿಯಲ್ಲಿ ತರಬೇತಿ ಸಿಗಬೇಕು’ ಎಂದು ಹೇಳಿದರು.
ಶಾಸಕ ರಹೀಂ ಖಾನ್ ಮಾತನಾಡಿ, ‘ಕೃಷಿಯಲ್ಲಿ ರೈತರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಹಾಗೂ ಮಾಹಿತಿ ಪಡೆದುಕೊಳ್ಳಲು ರೈತ ತರಬೇತಿ ಕೇಂದ್ರ ಹೆಚ್ಚು ಅನುಕೂಲವಾಗಲಿದೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಂಚಿನಾಳ, ರೈತ ತರಬೇತಿ ಕೇಂದ್ರದ ಅಧಿಕಾರಿ ಉದಯಕುಮಾರ, ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ ಇದ್ದರು.