ಬೀದರ್: ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂದು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸಲಹೆ ಮಾಡಿದರು.
ಬೀದರ್ ತಾಲ್ಲೂಕಿನ ಗೋರನಳ್ಳಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನಿಮಿತ್ತ ನಡೆದ ಎಂಜಿನಿಯರ್ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿಯೇ ಸಂಘದಡಿ ವಿವಿಧ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿ, ಕಾಲೇಜಿನ ಅನೇಕ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ರ್ಯಾಂಕ್ ಗಳಿಸಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಗುಣಮಟ್ಟದ ಶಿಕ್ಷಣದ ಕಾರಣ ಪ್ರತಿಷ್ಠಿತ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡೆಸಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುತ್ತಿವೆ ಎಂದು ನುಡಿದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್ಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಹೇಳಿದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯಕುಮಾರ ಮಾತನಾಡಿದರು. ವಿವಿಧ ಕಂಪನಿಗಳಿಗೆ ಆಯ್ಕೆಯಾದ ಹಾಗೂ 2021ನೇ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಡಾ. ಉಮಾ ದೇಶಮುಖ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಎಂಬಿಎ ವಿಭಾಗದ ಮುಖ್ಯಸ್ಥ ಭದ್ರಪ್ಪ ಹರಳಯ್ಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ವರದಿ ವಾಚಿಸಿದರು. ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ವಿಜಯಾನಂದ ಕೆ. ನಿರೂಪಿಸಿದರು.