ಬೆಂಗಳೂರು: ‘ಜನರಿಂದ ತಿರಸ್ಕೃತ ಗೊಂಡಿರುವ ಕಾಂಗ್ರೆಸ್–ಜೆಡಿಎಸ್ ಪಕ್ಷಗಳ ಅಪವಿತ್ರ ಮೈತ್ರಿ ಸರ್ಕಾರ ರಚನೆ ವಿರುದ್ಧ ಬಿಜೆಪಿ ರಾಜ್ಯ ಘಟಕ ಬುಧವಾರ ಜನಮತ ವಿರೋಧಿ ದಿನ ಆಚರಿಸಲಿದೆ’ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
‘ಎಲ್ಲ ಜಿಲ್ಲಾ ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಪಕ್ಷದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಿದ್ದಾರೆ. ನಗರದ ಮೌರ್ಯ ಹೋಟೆಲ್ ಎದುರಿನ ಗಾಂಧಿ ಪ್ರತಿಮೆ ಎದುರು ಪಕ್ಷದ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ತಮ್ಮ ಪಕ್ಷಕ್ಕೆ ಬಹುಮತ ಬಂದಿದ್ದರೆ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಎಚ್.ಡಿ.ಕುಮಾರಸ್ವಾಮಿ ಶೃಂಗೇರಿಯಲ್ಲಿ ಹೇಳಿದ್ದಾರೆ. ಈ ಮೂಲಕ ಜೆಡಿಎಸ್ಗೆ ಜನಾದೇಶ ದೊರೆತಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ’ ಎಂದು ಅವರು ವ್ಯಂಗ್ಯವಾಡಿದರು.