ಔರಾದ್: ತಾಲ್ಲೂಕಿನ ಸಂತಪುರ ಸಿದ್ಧರಾಮೇಶ್ವರ ಕಾಲೇಜಿನಲ್ಲಿ ಈಚೆಗೆ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬೋರ್ಗಿ ಸರ್ಕಾರಿ ಶಾಲೆಯ ಸಂಪನ್ಮೂಲ ಶಿಕ್ಷಕ ಮುತ್ತಣ್ಣ ಅವರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಕುರಿತ ಪುಸ್ತಕಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಎಚ್.ಟಿ.ಪೋತೆ ಅವರು ರಚಿಸಿರುವ ಮತ್ತು ಬೆಂಗಳೂರಿನ ಸಪ್ನ ಬುಕ್ ಹೌಸ್ ಹೊರತಂದಿರುವ ಡಾ. ಬಿ.ಆರ್.ಅಂಬೇಡ್ಕರ್ ಪುಸ್ತಕದ 220 ಪ್ರತಿಗಳನ್ನು ಖರೀದಿಸಿ, ವಿದ್ಯಾರ್ಥಿಗಳಿಗೆ ವಿತರಿಸಿರುವೆ’ ಎಂದರು.
‘ಅಂಬೇಡ್ಕರ್ ಅವರ ಕುರಿತು ವಿದ್ಯಾರ್ಥಿಗಳು ಅರಿಯಲಿ. ಅವರು ಎದುರಿಸಿದ ಸಂಕಷ್ಟ ಮತ್ತು ಸವಾಲುಗಳು ಗೊತ್ತಾಗಲಿ. ಸಂವಿಧಾನ ರಚನೆಯ ಮಹತ್ವ ತಿಳಿಯಲಿಎಂಬ ಆಶಯ ನನ್ನದು’ ಎಂದು ಹೇಳಿದರು.
ಕೆಎಎಸ್ ಅಧಿಕಾರಿ ಖಾಜಾ ಖಲೀಲುಲ್ಲ ಮತ್ತು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಮಾತನಾಡಿದರು. ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಮುತ್ತಣ್ಣ ಅವರು ತಮ್ಮ ಊರಿನ ಜನರಲ್ಲಿ ಜಾಗೃತಿ ಮೂಡಿಸಿ, 100ಕ್ಕೂ ಹೆಚ್ಚು ಶೌಚಾಲಯಗಳನ್ನು ಕಟ್ಟಿಸುವಲ್ಲಿ ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು.