ಹುಮನಾಬಾದ್: ‘ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಕ್ಷೇತ್ರದ ರಾಜೇಶ್ವರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅನುದಾನದಡಿ ಮಂಜೂರಾದ ಹೊಸ ಆಂಬುಲೆನ್ಸ್ ಹಸ್ತಾಂತರಿಸಿ ಅವರು ಮಾತನಾಡಿದರು.
‘ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯಗಳೊಂದಿಗೆ ಆಂಬುಲೆನ್ಸ್ ಸಹ ಅತಿಮುಖ್ಯವಾಗಿದೆ. ಕೊವಿಡ್ನಿಂದ ಈಗಾಗಲೇ ಹಲವಾರು ತೊಂದರೆಗಳನ್ನು ಅನುಭವಿಸಿದ್ದೇವೆ. ಮತ್ತೆ 4ನೇ ಅಲೆಯ ಬಗ್ಗೆ ಆತಂಕ ಶುರುವಾಗಿದ್ದು ಪ್ರತಿಯೊಬ್ಬರು ಸಹ ಎಚ್ಚರಿಕೆಯಿಂದ ಇರಬೇಕು’ ಎಂದು ಸಲಹೆ ನೀಡಿದರು.
ರಾಜೇಶ್ವರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಯುವರಾಜ್ ಬಿರಾದಾರ್, ಪ್ರಕಾಶ್ ಕಾಡಗೊಂಡ, ಸಚಿನ್ ಮಠಪತಿ ಸೇರಿದಂತೆ ಸಿಬ್ಬಂದಿ ಇದ್ದರು.