ಚಿಟಗುಪ್ಪ: ತಾಲ್ಲೂಕಿನ ಬಾದ್ಲಾಪುರ ಗ್ರಾಮದಲ್ಲಿ 2016-17ನೇ ಸಾಲಿನಲ್ಲಿ ಆರಂಭಿಸಲಾದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿಲ್ಲ!. ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.
‘ಗ್ರಾಮ ವಿಕಾಸ ಯೋಜನೆಯ ₹75 ಲಕ್ಷ ಅನುದಾನದಲ್ಲಿಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್ಐಡಿಎಲ್) ಕಟ್ಟಡ ನಿರ್ಮಾಣದ ಹೊಣೆ ಹೊತ್ತಿದೆ. ಕಾಮಗಾರಿ ಇನ್ನೂ ಮುಗಿದಿಲ್ಲ. ನನೆಗುದಿಗೆ ಬಿದ್ದಿದೆ. ಒಂದು ಕಟ್ಟಡ ಮುಗಿಸಲೂ ಇಷ್ಟು ಸಮಯ ಬೇಕಾ’ ಎಂದು ಜೆಡಿಎಸ್ ಮುಖಂಡ ವೀರೇಶ ಚವಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳು, ಶಾಸಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಪ್ರಯೋಜನವಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.
ಅಧಿಕಾರಿಗಳು ಕಾಮಗಾರಿ ಪ್ರಾರಂಭಿಸಿ ಕಾಂಕ್ರೀಟ್ ಕಂಭಗಳನ್ನು ನಿರ್ಮಿಸಿದ್ದಾರೆ. ಅಡಿಪಾಯದಲ್ಲಿ ಗಿಡ–ಗಂಟಿಗಳು ಬೆಳೆದು ನಿಂತಿವೆ. ಸುತ್ತಲಿನ ಪ್ರದೇಶದಲ್ಲಿ ಮುಳ್ಳು ಕಂಟಿ ಬೆಳೆದಿರುವುದರಿಂದ ವಿಷ ಜಂತುಗಳ ಆವಾಸ ತಾಣವಾಗಿ ಮಾರ್ಪಟ್ಟಿದೆ.
‘ಗ್ರಾಮದಲ್ಲಿ ಅಂಗನವಾಡಿ ಮಕ್ಕಳಿಗೆ ಬೋಧನೆ ಮಾಡಲು ಸಿಬ್ಬಂದಿ ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸೂಕ್ತ ಕಟ್ಟಡದ ಅವಶ್ಯಕತೆ ಇದೆ. ಈಗಲಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತು, ಕಟ್ಟಡ ಕಾಮಗಾರಿ ಆರಂಭಿಸಿ ಬೇಗ ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು’ ಎಂದು ಗ್ರಾಮಸ್ಥರು ಆಗ್ರಹಿಸುತ್ತಾರೆ.
ಈ ಸಂಬಂಧ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಂಪರ್ಕ ಸಾಧ್ಯವಾಗಲಿಲ್ಲ.