ಹುಮನಾಬಾದ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಉಪ ತಹಶೀಲ್ದಾರ್ ಕರೀಂ ಸಾಬ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಿತ್ರಾಬಾಯಿ ಜಮಾದಾರ ಮಾತನಾಡಿ, ‘ಅಂಗನವಾಡಿ ನೌಕರರಿಗೆ ಆರೋಗ್ಯ ಭದ್ರತೆ ಒದಗಿಸಬೇಕು. ಉತ್ತಮ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್ ನೀಡಬೇಕು. ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು’ ಎಂದರು.
ಕೊರೊನಾ ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ ₹25 ಸಾವಿರ ಪ್ರೋತ್ಸಾಹ ಧನ ಮತ್ತು ಉಚಿತ ಬಸ್ಪಾಸ್ ನೀಡಬೇಕು. ಊಟದ ವೆಚ್ಚ ಭರಿಸಬೇಕು ಎಂದು ಹೇಳಿದರು.
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಕಾರ್ಯದರ್ಶಿ ಉಷಾ ಗುತ್ತೇದಾರ, ಕೋಶಾಧ್ಯಕ್ಷೆ ವಿಜಯಲಕ್ಷ್ಮಿ ಕಲ್ಲೂರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಾಳಗೆ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್ ಇದ್ದರು.