ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಭವ ಮಂಟಪ: ಡಿಸೆಂಬರ್‌ನಲ್ಲಿ ಕಾಮಗಾರಿ

₹100 ಕೋಟಿ ಪ್ರತ್ಯೇಕ ಅನುದಾನ ನೀಡುವ ಭರವಸೆ: ಶಾಸಕ ಶರಣು ಸಲಗರ ಮಾಹಿತಿ
Last Updated 2 ಅಕ್ಟೋಬರ್ 2021, 1:50 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ನೂತನ ಅನುಭವ ಮಂಟಪಕ್ಕೆ ಈಗಾಗಲೇ ₹650 ಕೋಟಿ ಅನುದಾನ ನಿಗದಿಗೊಳಿಸಲಾಗಿದೆ. ಇದರ ಕಟ್ಟಡ ಕಾಮಗಾರಿ ಡಿಸೆಂಬರ್‌ನಲ್ಲಿ ಆರಂಭ ಆಗುವುದು ನಿಶ್ಚಿತ’ ಎಂದು ಶಾಸಕ ಶರಣು ಸಲಗರ ಹೇಳಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮಂಟಪ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಸವರಾಜ ಪಾಟೀಲ ಸೇಡಂ ಅವರು ಈ ಕುರಿತು ತೀವ್ರಗತಿಯಲ್ಲಿ ಕಾರ್ಯ ಕೈಗೊಳ್ಳುತ್ತಿದ್ದಾರೆ. ಶರಣ ಸ್ಮಾರಕಗಳ ಜತೆಯಲ್ಲಿ ನಗರ ದಲ್ಲಿಯೂ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾ ಗಿದೆ. ಇದಕ್ಕಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ₹100 ಕೋಟಿ ಪ್ರತ್ಯೇಕ ಅನುದಾನ ನೀಡುವ ಭರವಸೆಯಿದೆ’ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಗರದಿಂದ ದೂರವಿರುವ ಕಾರಣ ಸಾವಿರ ವಿದ್ಯಾರ್ಥಿಗಳು ಖಾಸಗಿ ಸಂಸ್ಥೆಗಳಿಗೆ ಹೋಗಿದ್ದಾರೆ. ಆದ್ದರಿಂದ ಈ ಸಲ ತ್ರಿಪುರಾಂತ ಸರ್ಕಾರಿ ಕಲ್ಯಾಣ ಮಂಟಪದಲ್ಲಿ ತರಗತಿ ತೆಗೆದುಕೊಳ್ಳಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ ತಗಡಿನ ಸೆಡ್ ನಿರ್ಮಿಸಿಕೊಡಲಾಗುತ್ತದೆ. ಮಳೆಯಿಂದ ಬಸವಕ ಲ್ಯಾಣ ಹಾಗೂ ಹುಲಸೂರ ತಾಲ್ಲೂ ಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ತಾಲ್ಲೂಕುವನ್ನು ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿದರೆ ಮನೆ ಹಾನಿ ಹಾಗೂ ಬೆಳೆ ಹಾನಿಗೆ ಪರಿಹಾರ ಒದಗಿಸುವುದಕ್ಕೆ ಸಾಧ್ಯ ಆಗುತ್ತದೆ. ಈ ಕಾರಣ ಈ ಬಗ್ಗೆ ಸಂಬಂಧಿತರೊಂದಿಗೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದರು.

ಅಕ್ಟೋಬರ್ 3 ರಂದು ನಗರದ ತೇರು ಮೈದಾನದಲ್ಲಿನ ಸಭಾಭವನದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರ ಸನ್ಮಾನ ಕಾರ್ಯಕ್ರಮ ನಡೆಯುವುದು. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಶ್ರಮಿಸಿದ ಕಾರ್ಯಕರ್ತರ ಅಭಿನಂದನೆ ನಡೆಯುವುದು. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಪ್ರಭು ಚವಾಣ್, ಮಾಜಿ ಶಾಸಕ ಎಂ.ಜಿ.ಮುಳೆ, ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಮಹಾರಾಷ್ಟ್ರದ ಶಾಸಕರಾದ ಅಭಿಮನ್ಯು ಪವಾರ ಔಸಾ, ಸಂಭಾಜಿ ಪಾಟೀಲ ನಿಲಂಗಾ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ತಾಲ್ಲೂಕಿನ ವಿವಿಧೆಡೆ ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಪೊಲೀಸರು ಅನವಶ್ಯಕವಾಗಿ ಕಾಟ ನೀಡುತ್ತಿರುವ ಬಗ್ಗೆ ಗೊತ್ತಾಗಿದ್ದು ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಸಂಬಂಧಿತ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ರಾಜ್ಯ ಸಮಿತಿ ಸದಸ್ಯ ದೀಪಕ ಗಾಯಕವಾಡ, ಜಿಲ್ಲಾ ಮುಖಂಡರಾದ ಶಂಕರ ನಾಗದೆ, ಅರವಿಂದ ಮುತ್ತೆ, ಪ್ರಧಾನ ಕಾರ್ಯದರ್ಶಿ ಹಣಮಂತ ಧನಶೆಟ್ಟಿ, ರಾಜಕುಮಾರ ಶಿರಗಾಪುರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT