ಬೀದರ್: ಬೀದರ್ ನಗರದಲ್ಲಿ ಹೊಸ ಕೊಳವೆಬಾವಿ ಕೊರೆಸುವುದನ್ನು ನಿಷೇಧಿಸಿ ಜಿಲ್ಲಾ ಆಡಳಿತ ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯ ಯಾವುದೇ ತಾಲ್ಲೂಕನ್ನು ಅಂತರ್ಜಲ ಅತಿ ಬಳಕೆ ಎಂದು ಘೋಷಿಸಿಲ್ಲ. ಈ ವರ್ಷ ಮುಂಗಾರಿನಲ್ಲಿ ಅತಿವೃಷ್ಟಿಯಾದ ಕಾರಣ ಕಾರಂಜಾ ಜಲಾಶಯ, ಮಾಂಜ್ರಾ ನದಿ, ಎಲ್ಲ ಕೆರೆ, ಹಳ್ಳ, ಕೊಳ್ಳಗಳು ಭರ್ತಿಯಾಗಿವೆ ಎಂದು ಸಚಿವರ ಗಮನ ಸೆಳೆದರು.
ಬೀದರ್ ನಗರದಲ್ಲಿ ಹೊಸ ಕೊಳವೆಬಾವಿ ಕೊರೆಯುವುದನ್ನು ನಿಷೇಧಿಸಿರುವುದರಿಂದ ಆರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಕೂಡಲೇ ಆದೇಶ ಹಿಂಪಡೆಯಲು ನಿರ್ದೇಶನ ನೀಡಿ ಕೊಳವೆಬಾವಿ ಕೊರೆಸಲು ಅವಕಾಶ ಮಾಡಿ ಕೊಡಬೇಕು ಎಂದು ಮನವಿ ಮಾಡಿದರು.
ಸೂರ್ಯಕಾಂತ ಅವರ ಮನವಿಗೆ ಸ್ಪಂದಿಸಿದ ಸಚಿವರು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬೀದರ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.