ಬೀದರ್: ಜಾಗೃತಿಯೇ ಏಡ್ಸ್ ತಡೆಗೆ ಇರುವ ಮಾರ್ಗವಾಗಿದೆ ಎಂದು ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದರು.
ಡಾ. ಚಲಮಲ್ ಆನಂದರಾವ್ ಶಿಕ್ಷಣ ಮತ್ತು ಚಾರಿಟಬಲ್ ಟ್ರಸ್ಟ್, ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆ, ನ್ಯೂ ಮದರ್ ತೆರೆಸಾ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಹೈದರಾಬಾದ್ ಕರ್ನಾಟಕ ನಾಗರಿಕರ ವೇದಿಕೆ ವತಿಯಿಂದ ಬೀದರ್ ತಾಲ್ಲೂಕಿನ ಗೋರನಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಜಾಗೃತಿ ಹಾಗೂ ಉಚಿತ ಎಚ್ಐವಿ ಪರೀಕ್ಷೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
25 ರಿಂದ 45 ವರ್ಷದ ಒಳಗಿನವರೇ ಹೆಚ್ಚು ಏಡ್ಸ್ಗೆ ಬಲಿಯಾಗುತ್ತಿದ್ದಾರೆ. ಯುವಜನರಿಗೆ ಆರೋಗ್ಯ ಮತ್ತು ಲೈಂಗಿಕ ಶಿಕ್ಷಣದ ಅರಿವು ನೀಡುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ ಮಾತನಾಡಿದರು. 50 ಜನರ ಉಚಿತ ಎಚ್ಐವಿ ಪರೀಕ್ಷೆ ಮಾಡಲಾಯಿತು. ಲಾಲ್ ಬಹಾದ್ದೂರ್ ಶಾಸ್ತ್ರಿ ಶಿಕ್ಷಣ ಸಂಸ್ಥೆಯ ಮಹಾದೇವಿ, ಭಾಗ್ಯಜ್ಯೋತಿ, ಸುನಿತಾ, ವಿನೋದ ಇದ್ದರು.