ಬೀದರ್: ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ವಿಳಂಬ ಮಾಡುವ ಮೂಲಕ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ’ ಎಂದು ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಆರೋಪಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಜಿಲೆಲಯ ವಿವಿಧ ದಲಿತ ಸಂಘಟನೆಗಳು ಇಲ್ಲಿಯ ಕನ್ನಡ ಸಾಹಿತ್ಯ ಸಂಘದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಇವೆ. ಉದ್ಯೋಗದಲ್ಲಿ ಮೀಸಲಾತಿ ನಿಯಮಗಳ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಅನೇಕ ಜನ ವಿದ್ಯಾವಂತ ಯುವಕರು ವಯೋಮಿತಿ ಮೀರಿ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.
‘ಆಡಳಿತಾರೂಢ ಪಕ್ಷದ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಅಹಿಂದ ಸಮುದಾಯ ಹಾಗೂ ದಲಿತ ಸಂಘಟನೆಗಳು ಒಂದಾಗಿ ಈಗಿನ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯುವ ಸಂಕಲ್ಪ ಮಾಡಬೇಕು’ ಎಂದರು.
ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಮನ್ನಾನ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ಅನಿಲಕುಮಾರ ಬೆಲ್ದಾರ್ ಮಾತನಾಡಿದರು. ಅಮೃತರಾವ್ ಚಿಮಕೋಡೆ, ಬಸವರಾಜ ಮಾಳಗೆ, ರಮೇಶ ಡಾಕುಳಗಿ, ಪ್ರದೀಪ ಜಂಜಿರೆ, ಜಾನ್ ವೆಸ್ಲಿ ಹಾಗೂ ಸೋಮನಾಥ ಕಂದಗೂಳೆ ಇದ್ದರು.