ಬೀದರ್: ರಾಷ್ಟ್ರೀಯ ಬಸವ ದಳದ ಸಮಾವೇಶ ನವೆಂಬರ್ 27ರಂದು ಇಲ್ಲಿನ ಪ್ರತಾಪ ನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅಧ್ಯಕ್ಷತೆಯಲ್ಲಿ ನಗರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಬಸವ ದಳದ ನೂತನ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅವರ ಪದಗ್ರಹಣ ಸಮಾರಂಭವೂ ಇದರೊಟ್ಟಿಗೆ ನಡೆಸಲು ಸಭೆ ತೀರ್ಮಾನಿಸಿತು.
‘ಸಮಾವೇಶದಲ್ಲಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಬಸವ ದಳದ ರಾಜ್ಯ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು, ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಳ್ಳುವರು’ ಎಂದು ಎಂದು ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾವೇಶದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ, ರಾಷ್ಟ್ರಮಟ್ಟದಲ್ಲಿ ಬಸವ ಜಯಂತಿ ಆಚರಣೆ, ಬಸವ ಕಾರಿಡಾರ್ ರಚನೆ, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಘೋಷಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ಸಮಾವೇಶದ ಯಶಸ್ವಿಗೆ ಜಿಲ್ಲೆಯ ಬಸವ ದಳದ ಪದಾಧಿಕಾರಿಗಳು ಹಾಗೂ ಪ್ರಮುಖರು ಈಗಿನಿಂದಲೇ ಸಿದ್ಧತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸೋಮಶೇಖರ ಪಾಟೀಲ ಗಾದಗಿ ತಿಳಿಸಿದ್ದಾರೆ.
ರಾಷ್ಟ್ರೀಯ ಬಸವ ದಳದ ಜಿಲ್ಲೆಯ 100 ಗ್ರಾಮ ಹಾಗೂ ವಲಯ ಘಟಕಗಳ ಪುನಶ್ಚೇತನ ಹೊಣೆಯನ್ನು ಆಯಾ ತಾಲ್ಲೂಕು ಘಟಕಗಳ ಅಧ್ಯಕ್ಷರಿಗೆ ವಹಿಸಲಾಗಿದೆ ಎಂದು ಹೇಳಿದರು.
ದಳದ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷ ಶಂಕರರಾವ್ ಪಾಟೀಲ, ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ ಜೊನ್ನಿಕೇರಿ, ಬೀದರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಪಾಟೀಲ, ಹೈಕೋರ್ಟ್ ವಕೀಲ ಜಯರಾಜ ಬುಕ್ಕಾ, ಬಸವ ದಳ ಹಾಗೂ ವಿವಿಧ ಸಂಘಟನೆಗಳ ಪ್ರಮುಖರಾದ ಶಿವಕುಮಾರ ಪಾಟೀಲ, ಸೂರ್ಯಕಾಂತ ರಾಮಶೆಟ್ಟಿ, ಶಂಕರರಾವ್ ಬುಧೇರಾ, ಭೀಮರಾವ್ ಹಡಪದ, ಸಂಜೀವ ಸೂರ್ಯವಂಶಿ, ವೆಂಕಟರಾವ್ ಸಿಂಧೆ, ಸಂತೋಷ ಚಲುವಾ, ಮಲ್ಲಿಕಾರ್ಜುನ ಪಂಚಾಕ್ಷರಿ, ಶ್ರೀಕಾಂತ ಪಾಟೀಲ, ಉಮೇಶ ಪಾಟೀಲ, ನಾಗಶೆಟ್ಟಿ ಶೆಟಕಾರ್, ಸಿದ್ದು ಶೆಟಕಾರ್, ರವಿ ಪಾಪಡೆ, ಕಂಟೆಪ್ಪ ಗಂದಿಗುಡಿ, ಬಸವರಾಜ ಭತಮುರ್ಗೆ ಶರಣಪ್ಪ ವಲ್ಲೇಪುರೆ, ವೈಜಿನಾಥ ಬುಟ್ಟೆ, ಗಣೇಶ ಬಿರಾದಾರ, ಮಲ್ಲಿಕಾರ್ಜುನ ಸಾವಳೆ, ಬಸವರಾಜ ಜಕ್ಕಾ, ರಾಜಶೇಖರ ಮಂಗಲಗಿ, ಓಂಕಾರ ಪಸರಗೆ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.