ಜಿಲ್ಲಾಡಳಿತ ಹಾಗೂ ವಿವಿಧ ಬಸವಪರ ಸಂಘಟನೆಗಳ ಸಹಭಾಗಿತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸಿದರು.
ಪೌರಾಡಳಿತ ಸಚಿವ ರಹೀಂ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಬಸವ ದಳದ ಜಿಲ್ಲಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಮಿ, ಬಸವಕೇಂದ್ರ, ಬಸವ ಸೇವಾ ಪ್ರತಿಷ್ಠಾನ ಸೇರಿದಂತೆ ವಿವಿಧ ಸಂಘಟನೆಗಳವರು ಪಾಲ್ಗೊಂಡಿದ್ದರು.
ನಗರದ ಬಸವೇಶ್ವರ ವೃತ್ತದಲ್ಲಿನ ಬಸವಣ್ಣನ ಮೂರ್ತಿ ಬಳಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಷಟಸ್ಥಲ ಧ್ವಜಾರೋಹಣ ನೆರವೇರಿಸಿ, ಮಾಲಾರ್ಪಣೆ ಮಾಡಿದರು. ಬಿಸಿಲು ಹೆಚ್ಚಿರುವುದರಿಂದ ಸಂಜೆ ಮೆರವಣಿಗೆ ನಡೆಸಲು ಬಸವ ಸಂಘಟನೆಗಳು ನಿರ್ಧರಿಸಿವೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರಳವಾಗಿ ಬಸವ ಜಯಂತಿ ಆಚರಿಸಲಾಗುತ್ತಿದೆ. ಇಡೀ ಮಾನವ ಕುಲದ ಏಳಿಗೆಗೆ ಶ್ರಮಿಸಿದವರು ಬಸವಣ್ಣನವರು. ಸಮ ಸಮಾಜದ ನಿರ್ಮಾಣಕ್ಕೆ ದುಡಿದು ಜಗತ್ತಿನ ಮೊದಲ ಸಂಸತ್ತು ನಿರ್ಮಿಸಿ ಪ್ರಜಾಪ್ರಭುತ್ವಕ್ಕೆ ನಾಂದಿ ಹಾಡಿದವರು ಎಂದು ಗೋವಿಂದ ರೆಡ್ಡಿ ಹೇಳಿದರು.