ಹುಮನಾಬಾದ್: ‘ಯುವ ಪೀಳಿಗೆಗೆ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಾದರ್ಶಗಳು ಅಗತ್ಯ’ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ತಾಲ್ಲೂಕಿನ ಘಾಟಬೋರಾಳ ಗ್ರಾಮದ ಬುದ್ಧ ವಿಹಾರದಲ್ಲಿ ನಡೆದ ನೂತನ ಬುದ್ಧ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,‘ಬುದ್ಧನ ತತ್ವ–ಆದರ್ಶಗಳು ಜಗತ್ತಿಗೆ ಮಾದರಿ ಆಗಿವೆ’ ಎಂದರು.
ಶಾಸಕ ರಾಜಶೇಖರ ಪಾಟೀಲ ಮಾತನಾಡಿ,‘ಸಮಾಜದಲ್ಲಿನ ಮೂಢನಂಬಿಕೆ ಹೋಗಲಾಡಿಸಿ ಸರ್ವರೂ ಸಮಾನತೆಯಿಂದ ಬದುಕುವಂತಾಗಬೇಕು ಎನ್ನುವುದು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಆಶಯವಾಗಿತ್ತು. ಹೀಗಾಗಿ ಈ ಮಹಾತ್ಮರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯ. ಇದರಿಂದ ಆದರ್ಶ ಸಮಾಜ ನಿರ್ಮಾಣ ಮಾಡಬಹುದು’ ಎಂದರು.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರೂ ಕೇಂದ್ರದಲ್ಲಿ ಸಚಿವ ಸ್ಥಾನ ದೊರೆಯಲಿಲ್ಲ. ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ದೊರಕಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಹೀಗಾಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲ ಪಕ್ಷದ ರಾಜಕೀಯ ನಾಯಕರುಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಭಗವಾನ್ ದಾಸ್ ರಾಠೋಡ, ಹುಮನಾಬಾದ್ ಪುರಸಭೆ ಸದಸ್ಯ ಸುನೀಲ ಪಾಟೀಲ, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಅಂಕುಶ ಗೋಖಲೆ, ಗಜೇಂದ್ರ ಕನಕಟ್ಕರ್, ಗಿರೀಶ್ ತುಂಬಾ ಹಾಗೂ ಸುನೀಲ ಪತ್ರಿ ಇದ್ದರು.