ಬೀದರ್: 'ಲಾಕ್ಡೌನ್ನಿಂದಾಗಿ ಎರಡು ತಿಂಗಳು ಬಂದ್ ಆಗಿದ್ದ ಕಾರಣ ಜಿಲ್ಲೆಯ ಎಲ್ಲ ಸೌಹಾರ್ದ ಸಹಕಾರಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ಸರ್ಕಾರ ಜಿಲ್ಲೆಯ ಸೌಹಾರ್ದ ಸಹಕಾರಿಗಳಿಗೆ ಬಡ್ಡಿ ರಹಿತ ಸಾಲ ನೀಡಬೇಕು’ ಎಂದು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಒಕ್ಕೂಟದ ಪದಾಧಿಕಾರಿಗಳು ನಿಯೋಗದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸೌಹಾರ್ದ ಸಹಕಾರಿಗಳು ಹೆಚ್ಚಾಗಿ ಬೀದಿ ಬದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಸ್ವ ಸಹಾಯ ಸಂಘಗಳ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತವೆ. ಆದರೆ, ಕೋವಿಡ್ 19 ಸೋಂಕು ಹರಡುವಿಕೆಯಿಂದ ಅನೇಕ ಜನ ಕೆಲಸ ಕಳೆದುಕೊಂಡಿದ್ದಾರೆ. ಮಧ್ಯಮ ವರ್ಗದವರು ಕೈಯಲ್ಲಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.
ಆರ್ಥಿಕ ಸಂಕಷ್ಟದಿಂದಾಗಿ ಅನೇಕ ಜನರಿಗೆ ಪ್ರತಿ ತಿಂಗಳ ಕಂತು ಹಾಗೂ ಬಡ್ಡಿ ತುಂಬಲು ಆಗುತ್ತಿಲ್ಲ. ಸರ್ಕಾರ ಸೌಹಾರ್ದ ಸಹಕಾರಿಗಳಿಗೆ ಆರ್ಥಿಕ ನೆರವು ನೀಡಿದರೆ ಅವರ ಬಡ್ಡಿಯನ್ನು ಮನ್ನಾ ಮಾಡಲು ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.
ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಗುರುನಾಥ ಜ್ಯಾಂತಿಕರ್, ಉಪಾಧ್ಯಕ್ಷ ಸಂಜುಕುಮಾರ ಪಾಟೀಲ, ನಿರ್ದೇಶಕರಾದ ಸತೀಶ ಪಾಟೀಲ, ಜಗನ್ನಾಥ ಕರಂಜೆ, ಕ್ರಾಂತಿಕುಮಾರ ಕುಲಾಲ್, ಬಾಬುರಾವ್ ಕಾರಬಾರಿ, ಸಂಯೋಜಕ ವೀರಶೆಟ್ಟಿ ಕಾಮಣ್ಣ ಇದ್ದರು.