ಬೀದರ್: ಕೋವಿಡ್ 19 ಪ್ರಯುಕ್ತ ಜಿಲ್ಲೆಯ ವೈದ್ಯಕೀಯ ಸಿಬ್ಬಂದಿಗೆ ಕೂಡಲೇ ಪರೀಕ್ಷಾ ಹಾಗೂ ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಪರೀಕ್ಷಾ ಕಿಟ್, ಥರ್ಮಲ್ ಸ್ಕ್ಯಾನರ್, ಹ್ಯಾಂಡ್ಗ್ಲೋಸ್, ಸ್ಯಾನಿಟೈಸರ್ ಒದಗಿಸಿಲ್ಲ. ಊಟದ ವ್ಯವಸ್ಥೆಯನ್ನೂ ಮಾಡಿಲ್ಲ. ಅವರು ಭಯದಲ್ಲಿ ಕೆಲಸ ಮಾಡುವ ಸ್ಥಿತಿ ಇದೆ ಎಂದು ಹೇಳಿದ್ದಾರೆ.
ಶಹಾಪುರ ಗೇಟ್ ಹಾಗೂ ಭಂಗೂರ ಬಳಿಯ ಚೆಕ್ಪೋಸ್ಟ್ಗೆ ಭೇಟಿ ನೀಡಿದಾಗ ಅನೇಕ ಸಿಬ್ಬಂದಿ ಸೌಕರ್ಯಗಳ ಕೊರತೆ ಕುರಿತು ಅಳಲು ತೋಡಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಸಿಬ್ಬಂದಿ ಎಂತಹ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವ ಗೋಜಿಗೆ ಹೋಗಿಲ್ಲ ಎಂದು ಆರೋಪಿಸಿದ್ದಾರೆ.
ಬಡವರು, ಕೂಲಿ ಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯಗಳನ್ನು ಘೋಷಿಸಿದ್ದರೂ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಬರುತ್ತಿಲ್ಲ. ಅನೇಕ ಬಡವರು, ಕೂಲಿ ಕಾರ್ಮಿಕರು ಹಸಿವಿನಿಂದ ಪರದಾಡುವಂತಾಗಿದೆ. ವಿಷಯ ಜಿಲ್ಲಾಡಳಿತದ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಪಾದಿಸಿದ್ದಾರೆ.
ಜಿಲ್ಲಾಡಳಿತದ ಕಾರ್ಯವೈಖರಿಯನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.