ಬೀದರ್: ಕೃಷಿ ಮಸೂದೆ, ಎಪಿಎಂಸಿ ಹಾಗೂ ಭೂಸುಧಾರಣೆ ತಿದ್ದುಪಡಿ ಮಸೂದೆ ವಿರೋಧಿಸಿ ನಗರದಲ್ಲಿ ಸೋಮವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರೈತರ ಹಾಗೂ ಕಾರ್ಮಿಕರ ಹಿತವನ್ನು ಕಡೆಗಣಿಸಿ ಖಾಸಗಿ ಕಂಪನಿಗಳಿಗೆ ಅನುಕೂಲ ಮೊಡಿಕೊಟ್ಟು ದೇಶ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ರೈತ, ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದು ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.
ಸಿಪಿಐ ಮುಖಂಡ ಬಾಬುರಾವ್ ಹೊನ್ನಾ, ಆರ್.ಪಿ.ರಾಜಾ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ, ಶ್ರೀಮಂತ ಬಿರಾದಾರ, ದಯಾನಂದ ಸ್ವಾಮಿ, ಬಾಬುರಾವ್ ಪಾಸ್ವಾನ್, ದತ್ತಾತ್ರಿ ಅಲ್ಲಮಕರೆಗೆ, ಸಂತೋಷ ಚೆಟ್ಟಿ, ಸೋಮನಾಥ ಮುಧೋಳ ಭಾಗವಹಿಸಿದ್ದರು.
ಸೆಂಟ್ರಿಂಗ್ ವರ್ಕರ್ಸ್ ಯೂನಿಯನ್, ಮನ್ಸೂರ್ಅಹ್ಮದ್ ಖಾದ್ರಿ, ಕಾರ್ಯದರ್ಶಿ ಮಹಮ್ಮದ್ ಹಬೀಬುದ್ದಿನ್, ಪಂಡಿತ ನಿರ್ಣಾಕರ್, ರವಿ ವಾಡೇಕರ್ ಪಾಲ್ಗೊಂಡಿದ್ದರು.
ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.