ಬೀದರ್: ಇಲ್ಲಿನ ಶಿವನಗರ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಅಲ್ಲಿಂದ ಠಾಣೆಗೆ ಕರೆದೊಯ್ದರು.
ಮಂಗಳವಾರ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಸೈಯದ್ ನಾಸಿರ್ ಹುಸೇನ್ ಅವರು ಜಯಶಾಲಿಯಾದ ನಂತರ ಮಾಧ್ಯಮದವರ ಬಳಿ ಮಾತನಾಡುವಾಗ ಕೆಲವರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಬುಧವಾರ ಸಂಜೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿಷಯ ತಿಳಿದು ಪೊಲೀಸರು ಕಾಂಗ್ರೆಸ್ ಕಚೇರಿ ಎದುರು ಬ್ಯಾರಿಕೇಡ್ಗಳನ್ನು ಅಳವಡಿಸಿ, ಬಿಗಿ ಬಂದೋಬಸ್ತ್ ಮಾಡಿದ್ದರು.
‘ದಿಕ್ಕಾರ ದಿಕ್ಕಾರ’ ಎಂದು ಘೋಷಣೆಗಳನ್ನು ಕೂಗುತ್ತ ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ನೂಕಾಟ, ತಳ್ಳಾಟ ಉಂಟಾಯಿತು. ಬಳಿಕ ಪೊಲೀಸರು, ಪಕ್ಷದ ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.
ಮುಖಂಡರಾದ ರೇವಣಸಿದ್ದಪ್ಪ ಜಲಾದೆ, ಶಶಿ ಹೊಸಳ್ಳಿ, ವೀರು ದಿಗ್ವಾಲ್ ಮತ್ತಿತರರು ಪಾಲ್ಗೊಂಡಿದ್ದರು