ಬೀದರ್: ‘ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು’ ಎಂದು ಅಂಚೆ ಅಧೀಕ್ಷಕಿ ಮಂಗಳಾ ಭಾಗವತ ಸಲಹೆ ನೀಡಿದರು.
ನಗರದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಆಧುನಿಕ ಸಮಾಜದಲ್ಲಿ ಕೆಲವರು ಸ್ವಾತಂತ್ರ್ಯ ಮತ್ತು ಸ್ವೇಚ್ಛಾಚಾರದ ವ್ಯತ್ಯಾಸ ತಿಳಿಯದೆ ಸಮಾನತೆ ಎಂದು ಕೊಳ್ಳುತ್ತ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದು ಕೌಟುಂಬಿಕ ಕಲಹ ಹಾಗೂ ವಿರಸಕ್ಕೂ ಕಾರಣವಾಗಿತ್ತಿರುವುದು ದುರ್ದೈವವೇ ಆಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
’ತಾಯಂದಿರು ತಮ್ಮ ಮಕ್ಕಳಿಗೆ ಗಂಡು ಹೆಣ್ಣು ಎಂದು ಭೇಧ ಭಾವ ಮಾಡದೇ ಉತ್ತಮ ಸಂಸ್ಕಾರ ಕೊಡುವ ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.
ಉದ್ಯಮಿ ಶಿವ ಸಾಯಿ ಸೂಪರ ಮಾರ್ಕೆಟ್ನ ಸಾಯಿಪ್ರಿಯಾ ವೀರೇಶ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸನ ಅಧಿಕಾರಿ ನಾಗರತ್ನ ಪಾಟೀಲ, ಸಹಕಾರಿ ಯೂನಿಯನ್ ನಿರ್ದೆಶಕ ಗುಂಡಪ್ಪ ಹನುಮಂತಪ್ಪ, 6ನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಪ್ರಭು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ರೋಹಿಣಿ ಮಾರುತಿ ಸೋನಾರ ಅವರನ್ನು ಸನ್ಮಾನಿಸಲಾಯಿತು.
ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ನ ಎಚ್.ಆರ್. ಮಲ್ಲಮ್, ಮಲ್ಲಿಕಾರ್ಜುನ ಹಾಗೂ ಅನಿಲ ಪಿ ನಿರೂಪಿಸಿದರು. ಎಸ್ ಜಿ ಪಾಟೀಲ ವಂದಿಸಿದರು.
ವಿವಿಧ ಗ್ರಾಮ ಪಂಚಾಯಿತಿಗಳಿಂದ ಘನ ತ್ಯಾಜ್ಯ ವಿಲೇವಾರಿ ಮತ್ತು ಕಸ ನಿರ್ವಹಣೆ ಗುತ್ತಿಗೆ ಪಡೆದ ಸ್ವ ಸಹಾಯ ಗುಂಪುಗಳ ಪ್ರತಿನಿಧಿಗಳು ಲಾಲ್ ಬಹಾದ್ದೂರ ಶಾಸ್ತ್ರಿ ಎಜುಕೇಶನ್ ಇನ್ಸ್ಟಿಟ್ಯೂಟ್ ಪ್ರತಿನಿಧಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.