ಕಮಲನಗರ: ವಿವಿಧತೆಯಲ್ಲಿ ಏಕತೆಯನ್ನು ಕಂಡ ಭಾರತ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವ ಪ್ರಶ್ನೆಯೇ ಉದ್ಭವಿಸದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.
ತಾಲ್ಲೂಕಿನ ಹೊಳಸಮುದ್ರ ಗ್ರಾಮದಲ್ಲಿ ಬುಧವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಸಿಎಎ ಜಾಗೃತಿ ಸಭೆಯಲ್ಲಿ ಚಾಯ್ ಪೆ ಚರ್ಚಾದಲ್ಲಿ ಮಾತನಾಡಿದರು.
ದೇಶದಲ್ಲಿ 1955ರಲ್ಲಿ ಪೌರತ್ವ ಕಾಯ್ದೆ ಜಾರಿಗೆ ಬಂದಿದ್ದು, ಹಂತ-ಹಂತವಾಗಿ ತಿದ್ದುಪಡಿಯಾಗುತ್ತಲೇ ಇದೆ. ಮುಸ್ಲಿಮರ ಪೌರತ್ವ ಕಿತ್ತುಕೊಳ್ಳಲಾಗುತ್ತದೆ. ಇಲ್ಲವೇ ಅವರನ್ನು ನುಸಳು ಕೋರರೆಂದು ತೀರ್ಮಾನಿಸಲಾಗುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ವೋಟ್ ಬ್ಯಾಂಕ್ ಗಿಮಿಕ್ ಮಾಡುತ್ತಿವೆ. ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ತೊಂದರೆ ಇಲ್ಲ ಎಂದರು.
ದೇಶ ಜಾತ್ಯತೀತ ರಾಷ್ಟ್ರವಾಗಿದ್ದು ಇದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಸ್ಲಿಮರಿಗೆ ಪ್ರಧಾನಿ ನರೇಂದ್ರ ಮೋದಿ, ಗ್ರಹ ಸಚಿವ ಅಮಿತ ಶಾ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭರತ ಕದಂ, ಮುಖಂಡ ಜ್ಞಾನೇಶ್ವರ ಪಾಟೀಲ್, ದೀಲಿಪ ಚವಾಣ್, ಶೇಖ ಸಹ್ಮದ್, ವಿಷ್ಣು, ಜಾವೇದ್, ಭೀಮಶಾ, ಸಚೀನ ರಾಠೋಡ್ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.