ಬೀದರ್: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘವು ಇಲ್ಲಿಯ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಸೋಮವಾರ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹ 2,400 ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಸಕ್ಕರೆ ಕಾರ್ಖಾನೆಗಳು ₹ 1,950 ಮಾತ್ರ ಸಂದಾಯ ಮಾಡಿವೆ ಎಂದು ಸಂಘದ ಪದಾಧಿಕಾರಿಗಳು ಆರೋಪಿಸಿದರು.
ಬಾಕಿ ಹಣಕ್ಕಾಗಿ ಸಚಿವರು, ಜಿಲ್ಲಾ ಆಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿ ಟನ್ನ ₹ 450 ಬಾಕಿ ಹಣ ಪಾವತಿಸುವವರೆಗೆ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ಹೇಳಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ, ಬಾಬುರಾವ್ ಜೋಳದಾಪಕಾ, ನಾಗಯ್ಯ ಹಿರೇಮಠ, ಪ್ರಕಾಶ ಬಾವಗೆ, ಪ್ರವೀಣ ಕುಲಕರ್ಣಿ ಮೊದಲಾದವರು ಧರಣಿಯಲ್ಲಿ ಪಾಲ್ಗೊಂಡಿದ್ದರು.