ಬೀದರ್: ‘ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಪೌತಿ ವಾರಸಾ ಖಾತೆ ಆಂದೋಲನ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಸಂಬಂಧಪಟ್ಟವರ ಮ್ಯುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ನಿಯಮಾನುಸಾರ ಭೂದಾಖಲೆಗಳ ವರ್ಗಾವಣೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು.
ನಗರದಲ್ಲಿ ಮಂಗಳವಾರ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.
‘ರೈತರು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಪೌತಿ ವಾರಸಾ ಆಂದೋಲವನ್ನು ಹಮ್ಮಿಕೊಳ್ಳುವ ದಿನಾಂಕಗಳನ್ನು ಪ್ರಕಟಿಸಬೇಕು. ಯೋಜನೆಯ ಅನುಷ್ಠಾನ ಮತ್ತು ಪ್ರಗತಿಗೆ ಒತ್ತು ಕೊಡಬೇಕು’ ಎಂದು ಸೂಚಿಸಿದರು.
‘ಕೃಷಿ ಜಮೀನಿನ ಮಾಲೀಕರು ಮೃತಪಟ್ಟ ನಂತರ ಮಾಲೀಕತ್ವವು ಮೃತರ ಉತ್ತರಾಧಿಕಾರಿ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ ಅಂತಹ ಜಮೀನುಗಳ ಸ್ವಾಧೀನವನ್ನು ಹೊಂದಿದ್ದರೂ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಕರ್ಯ ದೊರೆಯುತ್ತಿಲ್ಲ. ಫಸಲು ನಾಶವಾದರೂ ಬೆಳೆ ವಿಮೆ ದೊರೆಯುತ್ತಿಲ್ಲ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕಿದೆ’ ಎಂದು ಹೇಳಿದರು.
‘ತಹಶೀಲ್ದಾರರು ಕಂದಾಯ ಇಲಾಖೆಯ ಮಾರ್ಗ ಸೂಚಿಯಂತೆ ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬೀದರ್ ತಹಶೀಲ್ದಾರ್ ಗಂಗಾದೇವಿ ಇದ್ದರು.