ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೀದರ್: ಬಿಜೆಪಿ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯದ ಜನ ಬಹುಮತ ನೀಡದಿದ್ದರೂ ಬಿಜೆಪಿ ಅಧಿಕಾರಕ್ಕಾಗಿ ವಾಮಮಾರ್ಗ ಅನುಸರಿಸುತ್ತಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.
ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಕಾಂಗ್ರೆಸ್ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಿದ್ದಾರೆ. ಅನೇಕ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಕೈಬಿಡಬೇಕು. ಜನ ನೀಡಿರುವ ತೀರ್ಪನ್ನು ಗೌರವಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಕಾರ್ಯದರ್ಶಿಗಳಾದ ಅಮೃತರಾವ್ ಚಿಮಕೋಡೆ, ಇರ್ಷಾದ್ ಅಲಿ ಪೈಲ್ವಾನ್, ಮುಖಂಡರಾದ ಶಂಕರ ದೊಡ್ಡಿ, ರಾಜಶೇಖರ ಪಾಟೀಲ ಅಷ್ಟೂರ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಕಾರ್ಯದರ್ಶಿ ಪರ್ವೇಜ್ ಕಮಲ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ ಜಾಗೀರದಾರ್, ನಾಗನಾಥ ಪಾಟೀಲ, ನಯೀಮ್ ಕಿರ್ಮಾನಿ, ಸುನೀಲ ಬಚ್ಚನ್, ಎಂ.ಡಿ. ಬಾಬಾ ಮತ್ತಿತರರು ಪಾಲ್ಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.