ಬೀದರ್: ಮುಂಗಾರು ಪ್ರವೇಶಕ್ಕೆ ಇನ್ನೇನು ಕೆಲವೇ ದಿನಗಳು ಉಳಿದಿದ್ದು, ಮಳೆಗಾಲ ಎದುರಿಸಲು ಈ ಸಲ ನಗರಸಭೆ ಭರದ ಸಿದ್ಧತೆ ಕೈಗೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಹರ್ಷ ಮೂಡಿಸಿದೆ.
ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿಯೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಹೊಸ ಚರಂಡಿ, ಚರಂಡಿಗಳಲ್ಲಿ ತುಂಬಿಕೊಂಡಿರುವ ಹೂಳು ತೆಗೆಯಲು ಆರಂಭಿಸುತ್ತಿದ್ದಂತೆ ಮಳೆ ಸುರಿದು ಸಮಸ್ಯೆ ನನೆಗುದಿಗೆ ಬೀಳುತ್ತಿತ್ತು. ಇದರಿಂದಾಗಿ ಸಾರ್ವಜನಿಕರು ಅನೇಕ ರೀತಿಯ ಸಮಸ್ಯೆ ಎದುರಿಸುತ್ತಿದ್ದರು. ಆದರೆ, ಹಳೆಯ ತಪ್ಪುಗಳಿಂದ ಪಾಠ ಕಲಿತಿರುವ ನಗರಸಭೆ ಈ ಸಲ ಅದಕ್ಕೆ ಆಸ್ಪದ ಕೊಡುತ್ತಿಲ್ಲ.
ನಗರದ ಪ್ರಮುಖ ರಸ್ತೆಗಳು, ತಗ್ಗು ಪ್ರದೇಶಗಳನ್ನು ಗುರುತಿಸಿ ಮಳೆಗಾಲದಲ್ಲಿ ಆಗಬಹುದಾದ ಸಂಭವನೀಯ ಸಮಸ್ಯೆಗಳನ್ನು ತಪ್ಪಿಸಲು ನಗರಸಭೆ ಕಳೆದ ಎರಡು ತಿಂಗಳಿಂದ ಅದಕ್ಕಾಗಿ ಶ್ರಮಿಸುತ್ತಿದೆ.
ಲೋಕಸಭೆಗೆ ಚುನಾವಣೆ ಘೋಷಣೆಯಾದ ನಂತರ ಮಳೆಗಾಲದ ಸಿದ್ಧತೆ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿತ್ತು. ನಗರಸಭೆ ಪೌರಾಯುಕ್ತರು ಸೇರಿದಂತೆ ಕೆಲ ಪ್ರಮುಖ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆಗೊಳಿಸಲಾಗಿದೆ. ಕೆಲಸಗಳು ನನೆಗುದಿಗೆ ಬೀಳಬಹುದು ಎಂದು ಜನ ಅಂದುಕೊಂಡಿದ್ದರು. ಆದರೆ, ಜಿಲ್ಲಾಡಳಿತ ಅದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ನಗರದ ಹಲವೆಡೆ ಶರವೇಗದಲ್ಲಿ ಕಾಮಗಾರಿಗಳು ನಡೆಯುತ್ತಿವೆ.
ಸದಾ ಜನದಟ್ಟಣೆಯಿಂದ ಕೂಡಿರುವ ನಗರದ ಕೇಂದ್ರ ಬಸ್ ನಿಲ್ದಾಣದ ಪ್ರದೇಶದಲ್ಲಿ ವಿಶಾಲವಾದ ಹೊಸ ಚರಂಡಿ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಚರಂಡಿ ನಿರ್ಮಾಣದಿಂದ ಆ ಪ್ರದೇಶದಲ್ಲಿ ವಾಹನ ದಟ್ಟಣೆ ಸಮಸ್ಯೆ ಉಂಟಾಗಿತ್ತು. ಮಳಿಗೆಗಳವರ ವಹಿವಾಟಿನ ಮೇಲೆ ಪರಿಣಾಮ ಬೀರಿತ್ತು. ಈಗ ಅದೆಲ್ಲ ದೂರವಾಗಿದೆ. ರಸ್ತೆ ಬದಿಯಲ್ಲಿ ಸುರಿದಿರುವ ಮಣ್ಣು ಹಾಗೆಯೇ ಬಿದ್ದು ಅದನ್ನು ತುರ್ತಾಗಿ ವಿಲೇವಾರಿಗೊಳಿಸುವ ಅಗತ್ಯವಿದೆ. ಇಲ್ಲವಾದರೆ ಮಳೆ ಸುರಿದು ಮಣ್ಣೆಲ್ಲ ರಸ್ತೆ ಮೇಲೆ ಹರಿದು ಸಮಸ್ಯೆ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ.
ಇನ್ನು, ಮೈಲೂರ ಸಿಎಂಸಿ ಕಾಲೊನಿಯ ಮುಖ್ಯರಸ್ತೆಯಲ್ಲಿ ಈಗಾಗಲೇ ಹೊಸ ಚರಂಡಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈಗ ರಿಂಗ್ರೋಡ್ಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಚರಂಡಿ ನಿರ್ಮಿಸಲಾಗುತ್ತಿದೆ. ಈ ಪ್ರದೇಶದಲ್ಲಿ ಪ್ರತಿ ಮಳೆಗಾಲದಲ್ಲಿ ಮಳೆ ನೀರು ರಸ್ತೆ ಮೇಲೆ ಉಕ್ಕಿ ಹರಿದು ನಾನಾ ಸಮಸ್ಯೆಗಳಿಗೆ ಕಾರಣವಾಗುತ್ತಿತ್ತು. ಅನೇಕ ವರ್ಷಗಳಿಂದ ಜನ ಚರಂಡಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸುತ್ತಿದ್ದರು. ಈಗ ಅದಕ್ಕೆ ಮುಕ್ತಿ ಸಿಕ್ಕಿದೆ.
ಇಷ್ಟೇ ಅಲ್ಲ, ನಗರದ ವಿವಿಧ ಭಾಗಗಳಲ್ಲಿ ಚರಂಡಿ ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದೆ. ಆದರೆ, ಆಮೆಗತಿಯಲ್ಲಿ ನಡೆಯುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಅದಕ್ಕೆ ಚುರುಕು ನೀಡಬೇಕೆಂದು ಆಗ್ರಹಿಸಿದ್ದಾರೆ.
‘ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗಬಾರದು ಎಂಬ ಉದ್ದೇಶದಿಂದ ಈ ಸಲ ಬೇಸಿಗೆಯಲ್ಲಿಯೇ ಅನೇಕ ಕಡೆ ಹೊಸ ಚರಂಡಿ, ಹಳೆಯ ಚರಂಡಿಗಳ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಬಹುತೇಕ ಪೂರ್ಣಗೊಳ್ಳಲು ಬಂದಿದೆ’ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.