ಭಾಲ್ಕಿ: ‘ಕೊರೊನಾ ಎರಡನೇ ಅಲೆ ಅತ್ಯಂತ ಭೀಕರವಾಗಿ ವ್ಯಾಪಿಸುತ್ತಿರುವುದರಿಂದ ಮುಗ್ಧ ಜನರು ಬಲಿಪಶುವಾಗುತ್ತಿದ್ದಾರೆ. ಸಾರ್ವಜನಿಕರು ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿದುಕೊಂಡು ಸುರಕ್ಷಿತವಾಗಿ ಇರಬೇಕು’ ಎಂದು ಪುರಸಭೆ ಅಧ್ಯಕ್ಷ ಬಸವರಾಜ ವಂಕೆ ಹೇಳಿದರು.
ಇಲ್ಲಿನ ಗಾಂಧಿ ವೃತ್ತದಲ್ಲಿ ಮಂಗಳವಾರ ಪುರಸಭೆ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
‘ಕೊರೊನಾ ಬಗ್ಗೆ ಯಾರೂ ಭಯ ಪಡುವ ಅಗತ್ಯವಿಲ್ಲ. ಅನೇಕ ಮುಗ್ಧರು ತಮ್ಮ ಆತ್ಮಸ್ಥೈರ್ಯ ಕಳೆದುಕೊಂಡು ಜೀವ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾವನ್ನು ಧೈರ್ಯ ಹಾಗೂ ಜಾಗೃತಿಯಿಂದ ಎದುರಿಸಬೇಕಾಗಿದೆ. ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ತಿರುಗಾಡಬಾರದು. ಅಗತ್ಯ ವಸ್ತುಗಳ ಖರೀದಿಗಾಗಿ ಹೊರಬಂದಾಗ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಪರಸ್ಪರ ಅಂತರ ಕಾಪಾಡಿಕೊಂಡು ವ್ಯವಹರಿಸಬೇಕು. ಜನರು ತಮ್ಮ ನಿಷ್ಕಾಳಜಿಯಿಂದ ಕೊರೊನಾಗೆ ಬಲಿಯಾಗುತ್ತಿದ್ದಾರೆ’ ಎಂದು ತಿಳಿಸಿದರು.
‘ಗ್ರಾಮೀಣ ಭಾಗದಲ್ಲೂ ಕೊರೊನಾ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಜಾಗೃತೆಯಿಂದ ಜೀವನ ನಡೆಸಬೇಕು. ಸ್ವಚ್ಛತೆ ಮತ್ತು ಸುರಕ್ಷತೆಯಿಂದ ಕೋವಿಡ್ ವಿರುದ್ಧ ಹೋರಾಡಿ ಗೆಲ್ಲಬಹುದು’ ಎಂದು ತಿಳಿಸಿದರು.
ಪುರಸಭೆ ಸದಸ್ಯರಾದ ವಿಜಯಕುಮಾರ ರಾಜಭವನ, ಮಹಬೂಬ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಜಿಲ್ಲಾ ಅಂಕಿತಾಧಿಕಾರಿ ಡಾ.ಸಂತೋಷ ಕಾಳೆ, ಪುರಸಭೆ ಮುಖ್ಯಾಧಿಕಾರಿ ಚಾಂದ್ ಪಟೇಲ್, ಅಗ್ನಿಶಾಮಕ ಠಾಣಾಧಿಕಾರಿ ಸುಭಾಷ ಮೇದಾ, ಪುರಸಭೆ ಅಧಿಕಾರಿ ಸ್ವಾಮಿದಾಸ ಉಪಸ್ಥಿತರಿದ್ದರು.