ಬೀದರ್: ‘ಅಧಿಕಾರಿಗಳು ಅನಗತ್ಯವಾಗಿ ಕಾಲಹರಣ ಮಾಡದೆ ಜಬಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.
‘ಕೋವಿಡ್ ನಿಯಂತ್ರಣಕ್ಕೆ ಗಮನ ಹರಿಸಿ ಎಂದು ಪ್ರತಿ ದಿನ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳಿಗೆ ಸಂದೇಶ ಕಳುಹಿಸಬೇಕು. ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲನೆ ಮಾಡಬೇಕು’ ಎಂದು ಹೇಳಿದರು.
ಇಒಗಳಿಗೆ ನಿರ್ದೇಶನ: ‘ಆಯಾ ಕಡೆಗಳಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿಗಳಲ್ಲಿ ತೊಡಗಿದ ಎಲ್ಲ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಅವರು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ವಿವಿಧ ಸೇವೆಗಳ ಕೋರಿ ಬರುವ ಪ್ರತಿಯೊಬ್ಬರಿಗೂ ಕಡ್ಡಾಯ ಸ್ವ್ಯಾಬ್ ಟೆಸ್ಟ್ ಮತ್ತು ಕೋವಿಡ್ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು ಎಂದು ನಗರಸಭೆ ಆಯುಕ್ತ ರವೀಂದ್ರನಾಥ ಅಂಗಡಿ ಮನವಿ ಮಾಡಿದರು.
ಡಿಎಚ್ಒ ಡಾ.ವಿ.ಜಿ.ರೆಡ್ಡಿ, ಡಿಎಸ್ಒ ಡಾ. ಕೃಷ್ಣ ರೆಡ್ಡಿ, ಬ್ರಿಮ್ಸ ನಿರ್ದೇಶಕ ಶಿವಕುಮಾರ ಹಾಗೂ ಡಾ.ರಾಜಶೇಖರ ಇದ್ದರು.