ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಮತ್ತು ಜಾಯಿಗಾಂವ ಗ್ರಾಮಗಳಿಗೆ ತಹಶೀಲ್ದಾರ್ ಕೀರ್ತಿ ಚಾಲಕ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಕೋವಿಡ್ ಲಸಿಕೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಈ ಭಾಗದಲ್ಲಿ ಕೋವಿಡ್ ಲಸಿಕೆ ಪಡೆದುಕೊಳ್ಳಲು ಜನ ಹಿಂದೇಟು ಹಾಕುತ್ತಿರುವ ಕಾರಣ ತಾಲ್ಲೂಕು ಆಡಳಿತದ ಅಧಿಕಾರಿಗಳು ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಕುರಿತು ಮಾಹಿತಿ ಕಲೆ ಹಾಕಿದರು. ಬಳಿಕ ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ತಿಳಿಸಿದರು. ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ತಹಶೀಲ್ದಾರ್ ಕೀರ್ತಿ ಚಾಲಕ್ ಮಾತನಾಡಿ,‘ತಾಲ್ಲೂಕಿನಲ್ಲಿ ಲಸಿಕೆ ಕೊರತೆಯಿಲ್ಲ. 18 ವರ್ಷ ಮೇಲ್ಪಟ್ಟ ಎಲ್ಲ ವರ್ಗದ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆದು ಸೋಂಕು ತಡೆಗಟ್ಟಲು ಸಹಕರಿಸಬೇಕು’ ಎಂದು ಮನವಿ ಮಾಡಿದರು.
ಲಸಿಕೆ ಪಡೆದುಕೊಳ್ಳಲು ಜನ ಹಿಂಜರಿಯಬಾರದು ಎಂದರು. ರೇಷನ್ ಕಾರ್ಡ್, ಮಾಸಾಶಾನ, ಪಿಂಚಣಿ ಸೇರಿ ಮತ್ತಿತರ ಸರ್ಕಾರದ ಯೋಜನೆ, ಸೌಲಭ್ಯಗಳಿಂದ ಅರ್ಹರು ವಂಚಿತರಾಗಿದ್ದರೇ ಪುನಃ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು. ತಾ.ಪಂ ಇಒ ದೀಪಿಕಾ ನಾಯಕರ್, ತಾಲ್ಲೂಕು ವೈದ್ಯಾಧಿಕಾರಿ ಜ್ಞಾನೇಶ್ವರ ನಿರಗೂಡೆ ಇದ್ದರು.