ಬೀದರ್: ಭಾರಿ ಮಳೆ ಕಾರಣ ಜಿಲ್ಲೆಯಲ್ಲಿ ಬೆಳೆ ಹಾನಿಗೀಡಾದ ರೈತರು ಹಾಗೂ ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಆಗ್ರಹಿಸಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನದಿ, ಕೆರೆ ಕಟ್ಟೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ ಎಂದು ತಿಳಿಸಿದ್ದಾರೆ.
ಹಲವು ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿವೆ. ಬೆಳೆ ಹಾನಿಯಾಗಿದೆ. ಮನೆಗಳು ಕುಸಿದಿವೆ. ಸಣ್ಣಪುಟ್ಟ ಸೇತುವೆ ಹಾಗೂ ರಸ್ತೆಗಳು ಕಿತ್ತುಕೊಂಡು ಹೋಗಿವೆ. ಜನರೊಂದಿಗೆ ಜಾನುವಾರುಗಳೂ ತೊಂದರೆಯಲ್ಲಿವೆ ಎಂದು ಹೇಳಿದ್ದಾರೆ.
ತೊಂದರೆಗೆ ಸಿಲುಕಿರುವ ಜನ ಹಾಗೂ ಜಾನುವಾರುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.