ಔರಾದ್: ಪಟ್ಟಣದ ಉದ್ಘವಲಿಂಗ ಅಮರೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಇಲ್ಲಿಯ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಾಣಾ ವೇದಿಕೆ ಮುಖಂಡ ರಾಜಕುಮಾರ ಯಡವೆ, ಅನಿಲ ಹೇಡೆ, ವಿವೇಕ ನಿರ್ಮಳೆ, ಮಹೇಶ ನಿಸ್ಪತೆ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಕೆಲ ಕಾಲ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಇಲ್ಲಿಯ ಅಮರೇಶ್ವರ ದೇವಸ್ಥಾನದ ಅಭಿವೃದ್ಧಿಯಿಂದ ವಚಿತಗೊಂಡಿದೆ. ದೇವಸ್ಥಾನದ ಮಹಾದ್ವಾರ ಬೀಳುವ ಹಂತದಲ್ಲಿದೆ. ಅದನ್ನು ತೆರವು ಮಾಡಿ ಹೊಸದಾಗಿ ನಿರ್ಮಿಸಲು ಕಳೆದ ಎರಡು ವರ್ಷಗಳಿಂದ ಬೇಡಿಕೆ ಸಲ್ಲಿಸಲಾಗುತ್ತಿದೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ವಾರದೊಳಗೆ ಬೇಡಿಕೆಗೆ ಸ್ಪಂದನೆ ಸಿಗದಿದ್ದಲ್ಲಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಉಪತಹಶೀಲ್ದಾರ್ ರಮೇಶ ಪಾಂಚಾಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.