ಬೀದರ್: ಕೋವಿಡ್ ಪ್ರಯುಕ್ತ ರಾಜ್ಯ ಸರ್ಕಾರ ಖಾಸಗಿ ಹಾಗೂ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಘೋಷಿಸಿರುವ ತಲಾ ₹5 ಸಾವಿರ ಸಹಾಯ ಧನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಫೆಡರೇಷನ್ ಆಫ್ ಮುಸ್ಲಿಮ್ ಎಜುಕೇಶನಲ್ ಇನ್ಸ್ಟಿಟ್ಯೂಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆಸಿಫೊದ್ದಿನ್ ಆಗ್ರಹಿಸಿದ್ದಾರೆ.
ಖಾಸಗಿ ಶಿಕ್ಷಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯು ಅವರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಸರ್ಕಾರ ಅವರಿಗೆ ಕನಿಷ್ಠ ಮೂರು ತಿಂಗಳ ವರೆಗೆ ಸಹಾಯ ಧನ ಕೊಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
ರಾಜ್ಯ ಸರ್ಕಾರ ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವುದು ಸ್ವಾಗತಾರ್ಹ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನೂ ರದ್ದುಪಡಿಸಿ, ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಣ್ಣ ವ್ಯಾಪಾರಿಗಳು ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ದುಡಿಯುವವರ ಮಾದರಿಯಲ್ಲಿ ಕಳೆದ ವರ್ಷದ ಆಡಿಟ್ ವರದಿ ಆಧಾರದಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗೂ ಬಡ್ಡಿ ರಹಿತ ಸಾಲ ನೀಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯುತ್ ಬಿಲ್ನಲ್ಲಿ ಶೇ 50ರಷ್ಟು ರಿಯಾಯಿತಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.