ಬೀದರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಗರದಲ್ಲಿ ಮಾ. 5 ಮತ್ತು 6 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ನೆಹರೂ ಕ್ರೀಡಾಂಗಣದಲ್ಲಿ ಕ್ರೀಡೆಗಳು ಹಾಗೂ ಡಾ. ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಸಾಂಸ್ಕೃತಿ ಸ್ಪರ್ಧೆಗಳು ನಡೆಯಲಿವೆ. ಮಾ. 5ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವ ಭಗವಂತ ಖೂಬಾ, ಪೌರಾಡಳಿತ ಸಚಿವ ರಹೀಂಖಾನ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ಅಂದು ಸಂಜೆ 6ಕ್ಕೆ ರಂಗ ಮಂದಿರದಲ್ಲಿ ರಾಜ್ಯಮಟ್ಟದ ಕಲಾವಿದರಿಂದ ಸಂಗೀತೋತ್ಸವ ಜರುಗಲಿದೆ. ಮಾ. 6ರಂದು ಸಂಜೆ 5ಕ್ಕೆ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಕೊಕ್ಕೊ ಹಾಗೂ ಯೋಗ ಸ್ಪರ್ಧೆಗಳನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರಿಗೆ ಬೆಳಿಗ್ಗೆ ಉಪಾಹಾರ, ಊಟದ ವ್ಯವಸ್ಥೆ ಇರಲಿದೆ. ಎರಡು ದಿನ ಒಒಡಿ ಸೌಲಭ್ಯವೂ ಸಿಗಲಿದೆ. ಕ್ರೀಡಾಕೂಟದಲ್ಲಿ ಜಿಲ್ಲೆಯ ಎಂಟೂ ತಾಲ್ಲೂಕುಗಳ ಒಟ್ಟು 2 ಸಾವಿರ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆನ್ಲೈನ್ನಲ್ಲಿ ಹೆಸರು ನೋಂದಾಯಿಸಿಕೊಂಡವರು ಹಾಗೂ ನೇರವಾಗಿ ಭಾಗವಹಿಸಲು ಬಯಸುವ ಕ್ರೀಡಾಪಟುಗಳು 5ರಂದು ಬೆಳಿಗ್ಗೆ 9ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಹಾಜರಿರಬೇಕು ಎಂದು ಮನವಿ ಮಾಡಿದ್ದಾರೆ.