ಹುಮನಾಬಾದ್: ‘ಸತತ 25 ವರ್ಷಗಳಿಂದ ಬೀದರ್ ಜಿಲ್ಲೆ ಮತ್ತು ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಯನ್ನು ಡಾ.ಸಂಗೀತಾ ಹುಲಸೂರೆ ಅವರು ಕೈಗೊಂಡಿರುವುದು ಶ್ಲಾಘನೀಯವಾಗಿದೆ’ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ ಡಾ.ಚಂದ್ರಿಕಾ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟ್ರ ಮತ್ತು ಕುಟುಂಬಕ್ಕೆ ನಾಂದಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿ, ಕುಟುಂಬ ಕಲ್ಯಾಣ ವಿವಿಧ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ನಾಗನಾಥ ಹುಲಸೂರೆ, ಡಾ.ವಿ.ಬಿ.ಲಕ್ಕಾ, ಡಾ. ದಿಲೀಪ್ ಡೋಂಗ್ರೆ, ಡಾ. ವಿಶ್ವ ಸೈನೀರ್, ಡಾ. ರೋಹಿತ್ ರಘೋಜಿ, ಸುವರ್ಣಕುಮಾರಿ ಇದ್ದರು.