ಬೀದರ್: ಜಿಲ್ಲೆಯಲ್ಲಿ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಮೂಲಕ 10 ರೈತ ಉತ್ಪಾದಕ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಯಡಮಲ್ಲೆ ಹೇಳಿದರು.
ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾನ ಮನಸ್ಕ ರೈತರು ಸೇರಿ ಸಹಕಾರ ಅಥವಾ ಕಂಪನಿ ಕಾಯ್ದೆಯಡಿ ನೋಂದಣಿ ಮಾಡಿಕೊಂಡು ತಾವು ಬೆಳೆದ ಉತ್ಪನ್ನಗಳಿಗೆ ತಾವೇ ಮಾರುಕಟ್ಟೆ ಕಲ್ಪಿಸುವ, ಸಂಸ್ಕರಿಸುವ, ಶೇಖರಿಸುವ ವ್ಯವಸ್ಥೆಯನ್ನು ಹೊಂದಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇರುವ 280 ಸಹಕಾರ ಸಂಘಗಳು ರೈತರಿಗೆ ಬೆಳೆ ಸಾಲ, ಮಧ್ಯಮಾವಧಿ ಸಾಲ, ಪ್ರಧಾನಮಂತ್ರಿ ಫಸಲ್ ಬಿಮಾ, ಆರೋಗ್ಯ ಹಾಗೂ ಅಪಘಾತ ವಿಮೆ ಸೌಲಭ್ಯಗಳನ್ನು ಒದಗಿಸುತ್ತಿವೆ ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಾಳಪ್ಪ ಕಮತಗಿ ಮಾತನಾಡಿದರು. ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಉಪನ್ಯಾಸಕ ಎಸ್.ಜಿ. ಪಾಟೀಲ, ಮಹಾಲಿಂಗ ನಿರೂಪಿಸಿದರು. ಅನಿಲ ಪರೇಶ್ಯಾನೆ ವಂದಿಸಿದರು.